ಮರಿಯಮ್ಮನಹಳ್ಳಿ (ಹೊಸಪೇಟೆ ತಾಲ್ಲೂಕು): ಸಮೀಪದ ಅಯ್ಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಲಘು ಭೂಕಂಪನವಾಗಿದ್ದು, ಸಂಜೆ ಗ್ರಾಮಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಹೊಸಪೇಟೆ ತಾಲ್ಲೂಕಿನ ಅಯ್ಯನಹಳ್ಳಿ ಗ್ರಾಮದಲ್ಲಿ ಮಧ್ಯಾಹ್ನ 1.45ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆಯ ಭೂಕಂಪನವಾಗಿರುವುದರ ಬಗ್ಗೆ ಬೆಂಗಳೂರಿನಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ಬಂದಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಕಂದಾಯ ನಿರೀಕ್ಷ ಅಂದಾನಗೌಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಯಾರಿಗೂ ಭೂಕಂಪನದ ಅನುಭವವಾಗಿಲ್ಲವೆಂದು ತಿಳಿಸಿದ್ದಾರೆ. ಯಾವುದೇ ರೀತಿಯ ಹಾನಿಯೂ ಸಂಭವಿಸಿಲ್ಲ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಅಂದಾನಗೌಡ ತಿಳಿಸಿದರು.