ಹೊಸಪೇಟೆ (ವಿಜಯನಗರ): ‘ಬರುವ ಜನವರಿ 7, 8ರಂದು ‘ಹಂಪಿ ಉತ್ಸವ’ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ತಿಳಿಸಿದರು.
ತಾಲ್ಲೂಕಿನ ಕಮಲಾಪುರದ ಕರಡಿಧಾಮದ ‘ನೇಚರ್ ಕ್ಯಾಂಪ್’ನಲ್ಲಿ ಶುಕ್ರವಾರ ನಡೆದ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ, ಪ್ರವಾಸೋದ್ಯಮ ಸಚಿವ ಆನಂದ್ ಅವರೊಂದಿಗೆ ಈ ಕುರಿತು ಚರ್ಚಿಸಿದ ನಂತರ ದಿನಾಂಕ ನಿಗದಿಗೊಳಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಸ್ವಾಗತ ಮತ್ತು ಶಿಷ್ಟಾಚಾರ ಸಮಿತಿ, ಸಾರಿಗೆ ಸಮಿತಿ, ವಸತಿ ಸಮಿತಿ, ಆಹಾರ ಸಮಿತಿ, ಪ್ರಚಾರ ಮತ್ತು ಮಾಧ್ಯಮ ಸಮಿತಿ, ಜಾಹೀರಾತು ಸಮಿತಿ, ಆಹ್ವಾನ ಪತ್ರಿಕೆ, ಕರಪತ್ರ, ನೆನಪಿನ ಕಾಣಿಕೆ, ಪಾಸ್, ಪ್ರಮಾಣಪತ್ರ, ಬ್ಯಾನರ್ ಸಮಿತಿ 20ಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ರಂಗಣ್ಣನವರ್, ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ಗುರುಬಸವರಾಜ ಇತರರಿದ್ದರು.