ಹೊಸಪೇಟೆ (ವಿಜಯನಗರ): ಜಿಲ್ಲೆಯಾದ್ಯಂತ ಸತತ ನಾಲ್ಕನೇ ದಿನವೂ ಮಳೆ ಮುಂದುವರೆದಿದೆ.ಭಾರಿ ಮಳೆಗೆ ಕೆರೆಗೆ ಕೋಡಿ ಬಿದ್ದರೆ, ಕೆಲವೆಡೆ ರಸ್ತೆಸಂಪರ್ಕ ಕಡಿತಗೊಂಡಿದೆ. ಜಿಲ್ಲಾಡಳಿತವು ಶಾಲೆಗಳಿಗೆ ರಜೆ ಘೋಷಿಸಿದೆ.
ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯಲ್ಲಿ 11.3 ಸೆಂ.ಮೀ ಮಳೆಯಾಗಿದ್ದು, ಕಳೆದ ಐದು ವರ್ಷಗಳಲ್ಲಿಯೇ ಅತಿ ಹೆಚ್ಚು.
ಮಂಗಳವಾರ ನಸುಕಿನ ಜಾವ ಐದು ಗಂಟೆಗೆ ಆರಂಭಗೊಂಡ ಮಳೆ ಬೆಳಿಗ್ಗೆ ಎಂಟು ಗಂಟೆಯವರೆಗೆ ಎಡೆಬಿಡದೇ ಸುರಿಯಿತು. ಭಾರಿ ಮಳೆಗೆ ತಾಲ್ಲೂಕಿನ ನಾಗಲಾಪುರ ಗ್ರಾಮಕ್ಕೆ ಭಾರಿ ಹಳ್ಳ ಬಂದಿದೆ. ಹೋದ ತಿಂಗಳು ಇದೇ ಹಳ್ಳದಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗಿದ್ದರು. ಬ್ಯಾಲಕುಂದಿ-ಗರಗ ಗ್ರಾಮಗಳ ನಡುವಿನ ಸಂಪರ್ಕ ಕಡಿತಗೊಂಡಿದೆ.
ಹರಪನಹಳ್ಳಿ ತಾಲ್ಲೂಕಿನ ಸಿಂಗ್ರಿಹಳ್ಳಿ ಗ್ರಾಮದ ಕೆರೆಗೆ ಕೋಡಿ ಬಿದ್ದು, ಅಪಾರ ಪ್ರಮಾಣದ ನೀರು ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಸರ್ಕಾರಿ ಶಾಲೆ ಜಲಾವೃತಗೊಂಡಿದೆ. ನಾಗತಿಕಟ್ಟೆ-ಗೌಳೇರಹಟ್ಟಿ, ಬೇವಿನಹಳ್ಳಿ-ಉಚ್ಚಂಗಿದುರ್ಗ, ಉಚ್ಚಂಗಿದುರ್ಗ-ಅರಸೀಕೆರೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಜಿಲ್ಲೆಯ ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿಯಲ್ಲೂ ಮಳೆಯಾಗಿದೆ. ಹರಪನಹಳ್ಳಿ ತಾಲ್ಲೂಕಿನಲ್ಲಿ ಒಂದು ಮನೆಗೆ ಹಾನಿಯಾಗಿದೆ.