ಹೂವಿನಹಡಗಲಿ/ ಹೊಸಪೇಟೆ: ಮಲೆನಾಡು ಹಾಗೂ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ಒಳ ಹರಿವು ಪ್ರಾರಂಭವಾಗಿದೆ. ಇಲ್ಲಿನ ಸಿಂಗಟಾಲೂರು ಬ್ಯಾರೇಜ್ ನಲ್ಲಿ ನೀರು ಸಂಗ್ರಹ ಹೆಚ್ಚುತ್ತಿದ್ದು, ಮಂಗಳವಾರ 1100 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ.
ಕಳೆದ ವರ್ಷ ಮುಂಗಾರು, ಹಿಂಗಾರು ಮಳೆ ಕೊರತೆಯಿಂದ ತುಂಗಭದ್ರಾ ನದಿ ಬತ್ತಿ ಹೋಗಿತ್ತು. ಪಟ್ಟಣ ಸೇರಿದಂತೆ ತಾಲ್ಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ನೀರಿನ ಲಭ್ಯತೆ ಇಲ್ಲದೇ ಸ್ಥಗಿತಗೊಂಡಿದ್ದವು. ಸಿಂಗಟಾಲೂರು ಬ್ಯಾರೇಜ್ ಡೆಡ್ ಸ್ಟೋರೇಜ್ ತಲುಪಿತ್ತು. ನೀರಿನ ಸಮಸ್ಯೆ ತೀವ್ರಗೊಳ್ಳುವ ಮುನ್ನ ಮಳೆ ಸುರಿದಿರುವುದು ಜನರಿಗೆ ಕೊಂಚ ಸಮಾಧಾನ ತಂದಿದೆ.
ಕೆಲ ದಿನಗಳಿಂದ ನದಿಯ ಒಳ ಹರಿವು ಹೆಚ್ಚಳವಾಗಿರುವುದರಿಂದ ಸಿಂಗಟಾಲೂರು ಬ್ಯಾರೇಜ್ ನಲ್ಲಿ 1.981 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಬ್ಯಾರೇಜ್ನ ಎರಡು ಗೇಟ್ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಕೆಲ ದಿನಗಳಿಂದ ನದಿಯಲ್ಲಿ ಸ್ಥಗಿತವಾಗಿದ್ದ ನೀರ ಹರಿವು ಇಂದಿನಿಂದ ಪ್ರಾರಂಭವಾಗಿದೆ.
‘ಜಲಾನಯನ ಪ್ರದೇಶದಲ್ಲಿ ಮಳೆಯಾಗಿದ್ದರಿಂದ ಒಳ ಹರಿವು ಕ್ರಮೇಣ ಹೆಚ್ಚಳವಾಗುತ್ತಿದೆ. ಮೇಲಧಿಕಾರಿಗಳ ನಿರ್ದೇಶನದಂತೆ ಬ್ಯಾರೇಜ್ ಸಮತೋಲನ ಕಾಯ್ದುಕೊಂಡು 1100 ಕ್ಯೂಸೆಕ್ ನೀರನ್ನು ನದಿಗೆ ಹರಿಸುತ್ತಿದ್ದೇವೆ’ ಎಂದು ಸಿಂಗಟಾಲೂರು ಏತ ನೀರಾವರಿ ಯೋಜನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ ತಿಳಿಸಿದರು.