ಹೊಸಪೇಟೆ (ವಿಜಯನಗರ): ‘ಕೆಲಸದ ಸ್ಥಳದಲ್ಲಿ ಯಾರಾದರೂ ಲೈಂಗಿಕ ಕಿರುಕುಳ ನೀಡಿದರೆ ಮಹಿಳೆಯರು ಯಾರಿಗೂ ಹೆದರದೆ ಧೈರ್ಯದಿಂದ ಪೊಲೀಸ್ ಠಾಣೆಗೆ ಹೋಗಿ ದೂರು ಕೊಡಿ’ ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲ್ಲೂಕು ಕಾನೂನು ಸೇವಾ ಸಮಿತಿಯ ಸಹಭಾಗಿತ್ವದಲ್ಲಿ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ‘ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ 2013 ಅಧಿನಿಯಮ’ದ 8ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
‘ಪೊಲೀಸ್ ಠಾಣೆಗೆ ಹೋಗಿ ಕೇಸ್ ಕೊಟ್ಟರೆ ಖಂಡಿತವಾಗಿಯೂ ನ್ಯಾಯ ಸಿಗುತ್ತದೆ. ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ’ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಬಿ.ಹರ್ಷಲ್ ನಾರಾಯಣ್ರಾವ್, ‘ಸುಳ್ಳು ದೂರು ದಾಖಲಿಸಿದ್ದಲ್ಲಿ ಅಂಥವರಿಗೆ ಶಿಕ್ಷೆಯಾಗುತ್ತದೆ. ಹಾಗಾಗಿ ಯಾರೂ ಕಾಯ್ದೆ ದುರುಪಯೋಗ ಪಡಿಸಿಕೊಳ್ಳಬಾರದು’ ಎಂದು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಯಲಿಗಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಳೆನಾಗಪ್ಪ, ತಾಲ್ಲೂಕು ಕಾನೂನು ಸೇವಾ ಸಮಿತಿಯ ಶ್ವೇತಾಂಬರಿ ಎಸ್.ಪಿ, ಆರ್ .ರಾಮಪ್ಪ, ಮೇಲ್ವಿಚಾರಕಿ ಸುಜಾತಾ ಇದ್ದರು.