ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ನುಡಿಹಬ್ಬ (ಘಟಿಕೋತ್ಸವ) ಜನವರಿ 10ರಂದು ನಡೆಯಲಿದ್ದು, ನಾಡೋಜ ಗೌರವಕ್ಕೆ ಬಸವಲಿಂಗ ಪಟ್ಟದೇವರು, ತೇಜಸ್ವಿ ಕಟ್ಟಿಮನಿ ಮತ್ತು ಎಸ್.ಸಿ.ಶರ್ಮಾ ಪಾತ್ರರಾಗಲಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಅವರು ಈ ವಿಷಯ ಪ್ರಕಟಿಸಿದರು.
ಈ ಬಾರಿ ದಾಖಲೆಯ 264 ವಿದ್ಯಾರ್ಥಿಗಳು ಪಿಎಚ್.ಡಿ ಪದವಿಯನ್ನು ಪಡೆಯಲಿದ್ದಾರೆ, ಕಳೆದ ವರ್ಷ 166 ಮಂದಿ ಪಿಎಚ್.ಡಿ ಪಡೆದುದು ಇದುವರೆಗಿನ ದಾಖಲೆಯಾಗಿತ್ತು ಎಂದರು.
ಜ.10ರಂದು ಸಂಜೆ 5 ಗಂಟೆಗೆ ಕುಲಾಧಿಪತಿ ಥಾವರ್ ಚಂದ್ ಗೆಹಲೋತ್ ಅವರು ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಡಿ.ಲಿಟ್ ಹಾಗೂ ಪಿಎಚ್.ಡಿ ಪ್ರದಾನ ಮಾಡಲಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ಎ. ಕೋರಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.
ವಿಶ್ವವಿದ್ಯಾಲಯ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ, ಈ ಬಜೆಟ್ನಲ್ಲಿ ಸರ್ಕಾರ ಅಗತ್ಯದ ಅನುದಾನ ನೀಡುವ ವಿಶ್ವಾಸ ಇದೆ ಎಂದು ಕುಲಪತಿ ಹೇಳಿದರು.
ಕುಲಸಚಿವ ಡಾ.ವಿಜಯ ಪೂಣಚ್ಚ, ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು.