ಹೊಸಪೇಟೆ (ವಿಜಯನಗರ): ‘ಜ. 27ರಿಂದ 29ರ ವರೆಗೆ ನಡೆಯಲಿರುವ ‘ಹಂಪಿ ಉತ್ಸವ’ದ ಲೋಗೋ ಅನ್ನು ಜ. 20ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆಗೊಳಿಸುವರು’ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ತಿಳಿಸಿದರು.
ಅನಾರೋಗ್ಯದ ಕಾರಣದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಹಂಪಿ ಉತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ. ದಸರಾ ನಂತರ ಅತಿ ಹೆಚ್ಚು ಪ್ರಾಮುಖ್ಯತೆ ಹೊಂದಿದೆ. ಉತ್ಸವಕ್ಕೆ ಅಗತ್ಯ ಸಿದ್ಧತೆ ಚುರುಕುಗೊಳಿಸಬೇಕೆಂದು ಜಿಲ್ಲಾಧಿಕಾರಿಗೆ ಸೂಚಿಸಿದರು.
ಉತ್ಸವದಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಾರೆ. ಅವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ದತೆಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ಗಣ್ಯ ವ್ಯಕ್ತಿಗಳು ಹಾಗೂ ಕಲಾವಿದರ ಪಟ್ಟಿಯನ್ನು ಶೀಘ್ರ ಅಂತಿಮಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್., ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಬಿ.ಕೆ. ಇತರರಿದ್ದರು.