ಹೊಸಪೇಟೆ (ವಿಜಯನಗರ): ಮಹಾಶಿವರಾತ್ರಿ ನಿಮಿತ್ತ ನೂರಾರು ಸಂಖ್ಯೆಯ ಭಕ್ತರು ಸೋಮವಾರ ಹಂಪಿಗೆ ಬಂದು ವಿರೂಪಾಕ್ಷೇಶ್ವರನ ದರ್ಶನ ಪಡೆದರು.
ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಮಿಂದೆದ್ದು, ದೇಗುಲದ ವರೆಗೆ ಬರಿಗಾಲಲ್ಲಿ ನಡೆದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ವಿವಿಧ ಕಡೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದದ್ದರಿಂದ ರಥಬೀದಿ, ದೇವಸ್ಥಾನದ ಪರಿಸರದಲ್ಲಿ ಜನಜಾತ್ರೆ ಕಂಡು ಬಂದಿತು.
ಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ ವಿರೂಪಾಕ್ಷೇಶ್ವರನಿಗೆ ವಿಶೇಷ ರೀತಿಯಲ್ಲಿ ಅಲಂಕರಿಸಿ, ಪೂಜೆ ನೆರವೇರಿಸಲಾಯಿತು. ನಗರದ ಸಣ್ಣಕ್ಕಿ ವೀರಭದ್ರೇಶ್ವರ ದೇವಸ್ಥಾನ, ನೀಲಕಂಠ ದೇವಸ್ಥಾನದಲ್ಲೂ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.