ಹೊಸಪೇಟೆ (ವಿಜಯನಗರ): ಶಾಸಕ ರಮೇಶ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಸೋದರ ಅಳಿಯ, ಬಿಜೆಪಿ ಯುವ ಮುಖಂಡ ಸಂದೀಪ್ ಸಿಂಗ್, ಶನಿವಾರ ವಾಲ್ಮೀಕಿ ನಾಯಕ ಸಮಾಜದ ಕ್ಷಮೆಯಾಚಿಸಿದ್ದಾರೆ.
ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಅವರ ಮಧ್ಯಸ್ಥಿಕೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ಏಳು ಕೇರಿಯ ವಾಲ್ಮೀಕಿ ನಾಯಕ ಸಮಾಜದ 50ಕ್ಕೂ ಹೆಚ್ಚು ಮುಖಂಡರು ಹಾಗೂ ಸಂದೀಪ್ ಸಿಂಗ್ ಪಾಲ್ಗೊಂಡಿದ್ದರು.
‘ವಾಲ್ಮೀಕಿ ಸಮಾಜದಿಂದಲೇ ನಿಮ್ಮ ಮಾವ ಆನಂದ್ ಸಿಂಗ್ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ನಾಲ್ಕು ಸಲ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಸಮಾಜ ನಿಮಗೇನು ಅನ್ಯಾಯ ಮಾಡಿದೆ’ ಎಂದು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಉಪಾಧ್ಯಕ್ಷ ನಾಣಿಕೇರಿ ತಿಮ್ಮಯ್ಯ ಸೇರಿದಂತೆ ಸಮಾಜದ ಮುಖಂಡರು ಪ್ರಶ್ನಿಸಿದ್ದಾರೆ.
ಅದಕ್ಕೆ ಸಂದೀಪ್ ಸಿಂಗ್, ‘ನನ್ನಿಂದ ತಪ್ಪಾಗಿದೆ. ಭವಿಷ್ಯದಲ್ಲಿ ಈ ರೀತಿ ಮಾಡಲಾರೆ. ನನ್ನನ್ನು ಸಮಾಜದವರು ಕ್ಷಮಿಸಬೇಕು’ ಎಂದು ಸಭೆಯಲ್ಲಿ ಹೇಳಿದರು ಎಂಬ ಸಂಗತಿಯನ್ನು ವಿಶ್ವನಾಥ್ ರಾವ್ ಕುಲಕರ್ಣಿ, ನಾಣಿಕೆರೆ ತಿಮ್ಮಯ್ಯ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ. ಈ ಕುರಿತು ಸಂದೀಪ್ ಸಿಂಗ್ ಅವರನ್ನು ಸಂಪರ್ಕಿಸಿದಾಗ ಕರೆ ಸ್ವೀಕರಿಸಲಿಲ್ಲ.
ರಮೇಶ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಸಂದೀಪ್ ಸಿಂಗ್ ವಿರುದ್ಧ ಸೆ.1ರಂದು ವಾಲ್ಮೀಕಿ ನಾಯಕ ಸಮಾಜದವರು ಸಭೆ ಸೇರಿ, ಕ್ಷಮೆಯಾಚನೆಗೆ ಎರಡು ದಿನಗಳ ಗಡುವು ನೀಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.