ರೋಡ್ ಶೋ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಗೋಪಾಲಕೃಷ್ಣ ಅವರು ಪಕ್ಷ ಬಿಡುವುದರ ಬಗ್ಗೆ ವದಂತಿ ಇದೆಯಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ನಳಿನ್ಕುಮಾರ್ ಪ್ರತಿಕ್ರಿಯಿಸಿ, ‘ನಾವು ಯಾರಿಗೂ ಟಿಕೆಟ್ ಕೊಡಲ್ಲ ಎಂದು ಹೇಳಿಲ್ಲ. ಯಾರಿಗೆ ಟಿಕೆಟ್ ನೀಡಬೇಕು ಎಂಬುದು ನಿರ್ಧಾರವಾಗಿಲ್ಲ. ಎಲ್ಲವೂ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಮಯ ಬಂದಾಗ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಸಚಿವ ವಿ. ಸೋಮಣ್ಣ ಅವರಿಗೆ ಬೇರೆ ಬೇರೆ ಹೇಳಿಕೆಗಳಿಂದ ನೋವಾಗಿದೆ. ಬೇಜಾರಿನಿಂದ ಕಣ್ಣೀರು ಹಾಕಿದ್ದಾರೆ. ಬಿಜೆಪಿಯಲ್ಲಿಯೇ ಇರುತ್ತೇನೆ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಯಾರು ಕೂಡ ಪಕ್ಷ ಬಿಟ್ಟು ಹೋಗುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.