ಹೊಸಪೇಟೆ (ವಿಜಯನಗರ): ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ಸೋಮವಾರ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಬಂಧನ ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿ.ಎಫ್.ಐ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟಿಸಿದರು.
ಈ ಸಂಬಂಧ ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟಿಸಿದ ಕಾರ್ಯಕರ್ತರು ತಹಶೀಲ್ದಾರ್ ಗುರುಬಸವರಾಜ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಂಘಟನೆಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಸೊಹೈಲ್ ಮಾತನಾಡಿ, ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷದಿಂದ ನಡೆಸುತ್ತಿರುವ ದ್ವೇಷ ಮತ್ತು ತಾರತಮ್ಯದ ಆಡಳಿತ ವಿರೋಧಿಸಿ ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದ ವಿದ್ಯಾರ್ಥಿಗಳನ್ನು ಬಂಧಿಸಿರುವುದು ಖಂಡನೀಯ ಎಂದರು.
ತಕ್ಷಣವೇ, ಬಂಧಿತ ವಿದ್ಯಾರ್ಥಿಗಳ ಮೇಲೆ ದಾಖಲಿಸಿರುವ ಕೇಸ್ ವಾಪಾಸ್ ಪಡೆದು ಬಿಡುಗಡೆಗೊಳಿಸಬೇಕು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೋಲಿಸರ ಮೇಲೆ ಕ್ರಮ ಕೈಗೊಂಡು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಕೋಶಾಧಿಕಾರಿ ಯೂಸುಫ್, ಸಮಿತಿ ಸದಸ್ಯರಾದ ಶೇಕ್ಷಾವಲಿ, ಫರ್ಡೀನ್ ಇದ್ದರು.