ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಪಾಲಯ್ಯನಕೋಟೆ ಕೆರೆಯ ಅಂಗಳದಲ್ಲಿ ತಾಲ್ಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭಾನುವಾರ ಚಾಲನೆ ನೀಡಿದರು.
ಕೆರೆ ತುಂಬಿಸುವ ಯೋಜನೆಗೆ ಈ ಮೊದಲು ₹ 670 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಈಗ ಹೆಚ್ಚುವರಿಯಾಗಿ ₹ 130 ಕೋಟಿ ಅನುದಾನ ಬಂದಿದೆ. ಈ ಅನುದಾನವನ್ನು ಬಳಸಿಕೊಂಡು ತಾಲ್ಲೂಕಿನ ಎಲ್ಲಾ 74 ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಕೈಗೊಳ್ಳಲಾಗುವುದು. ಇದರಿಂದ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಬವಣೆ ನೀಗುವುದರ ಜೊತೆಗೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗಿ ಸಣ್ಣ ರೈತರಿಗೆ ಹೆಚ್ಚಿನ ಲಾಭವಾಗಲಿದೆ ಎಂದರು.
ಕೊಟ್ಟೂರು ಹಾಗೂ ಕೂಡ್ಲಿಗಿ ಎರಡು ತಾಲ್ಲೂಕುಗಳ ಸಾರ್ವಜನಿಕರ ಹಿತದೃಷ್ಟಿಯಿಂದ ಸಮಾನಾಂತರವಾಗಿ ಅಭಿವೃದ್ಧಿ ಹೊಂದಬೇಕು. ಇದಕ್ಕಾಗಿ ಶಾಸಕ ಭೀಮಾ ನಾಯ್ಕ ಅವರೊಂದಿಗೆ ಸಮನ್ವಯದೊಂದಿಗೆ ಕೆಲಸ ಮಾಡುತ್ತೇವೆ ಎಂದರು. ಈ ಯೋಜನೆ ಅನುಷ್ಠಾನದ ಹೊಣೆಯನ್ನು ಹೂವಿನಹಡಗಲಿಯಲ್ಲಿನ ಕರ್ನಾಟಕ ನೀರಾವರಿ ನಿಗಮದ ಸಿಂಗಟಾಲೂರು ಏತ ನೀರಾವರಿ ಯೋಜನೆಯ 2ನೇ ವಿಭಾಗದ ಅಧಿಕಾರಿಗಳಿಗೆ ವಹಿಸಲಾಗಿದೆ. ಮುಂಡರಗಿಯಲ್ಲಿನ ಸಣ್ಣ ನೀರಾವರಿ ನಿಗಮದ ಕೆಲ ಅಧಿಕಾರಿಗಳು ಈ ಯೋಜನೆಯ ಉಸ್ತುವಾರಿ ತಮಗೆ ವಹಿಸುವಂತೆ ಒತ್ತಡ ಹೇರುತ್ತಿದ್ದಾರೆ. ಒಂದು ವೇಳೆ ಈ ಯೋಜನೆಯ ಉಸ್ತುವಾರಿಯನ್ನು ಮುಂಡರಗಿ ವಿಭಾಗಕ್ಕೆ ವಹಿಸಿದರೆ ಅಲ್ಲಿಂದ ತಾಂತ್ರಿಕವಾಗಿ ಯೋಜನೆಯ ಸಾಧಕ ಭಾದಕಗಳನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಎಂ.ಎಂ.ಜೆ. ಹರ್ಷವರ್ಧನ್ ಇದ್ದರು.