ಹೊಸಪೇಟೆ(ವಿಜಯನಗರ): ಸಂಘಟನೆಯ ಮೂಲಕ ಬಿಜೆಪಿಯನ್ನು ಬಲಿಷ್ಠವಾಗಿ ಬಲಪಡೆಸುವುದರ ಕಡೆ ಒತ್ತು ನೀಡುವುದರ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಪಣತೊಡಬೇಕೆಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚೆನ್ನಬಸವನಗೌಡ ಪಾಟೀಲ ಎಂದು ಹೇಳಿದರು.
ನಗರದಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಪುರಸಭೆ, ಪಟ್ಟಣ ಪಂಚಾಯ್ತಿಗಳ ಬಿಜೆಪಿ ಸದಸ್ಯರುಗಳಿಗೆ ಹಮ್ಮಿಕೊಂಡಿದ್ದ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಪಕ್ಷ ಸದಾ ಸಂಘಟನೆಯನ್ನೇ ನಂಬಿಕೊಂಡು ಬಂದ ಪಕ್ಷವಾಗಿದ್ದು, ಕಾರ್ಯಕರ್ತರೇ ಪಕ್ಷದ ಜೀವಾಳ. ಆದ್ದರಿಂದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು, ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಸಂಘಟನೆಯಲ್ಲಿ ತೊಡಗಿಕೊಂಡು ಮನೆ ಮನೆಗೆ ಪಕ್ಷದ ಯೋಜನೆಗಳನ್ನು ತಲುಪಿಸಬೇಕು. ಜೊತೆಗೆ ಮುಂಬರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದರ ಜೊತೆಗೆ ಮತ್ತೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕು ಎಂದು ಹೇಳಿದರು.
ಸಂಸದ ವೈ.ದೇವೇಂದ್ರಪ್ಪ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸಹ ಎರಡನೇ ಬಾರಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಯಾರಿಗೇ ಟಿಕೆಟ್ ನೀಡಿದರೂ ಅವರಿಗೆ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನೀಡುವುದರೊಂದಿಗೆ ಅವರ ಪರವಾಗಿ ಕೆಲಸ ಮಾಡುತ್ತೇನೆ. ಇನ್ನು ಮೂರನೇ ಬಾರಿ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವೆಲ್ಲಾ ಪಕ್ಷ ಸಂಘಟನೆಯಲ್ಲಿ ತೊಡಗೋಣ ಎಂದರು.
ಬಳ್ಳಾರಿ ವಿಭಾಗದ ಸಂಘಟನಾ ಕಾರ್ಯದರ್ಶಿ ಪೂಜಪ್ಪ ಮಾತನಾಡಿದರು. ಜಿಲ್ಲಾ ಪ್ರಭಾರಿ ಗಿರಿಗೌಡ, ಸಿದ್ಧಾರ್ಥಸಿಂಗ್, ಬಲ್ಲಾಹುಣ್ಸಿ ರಾಮಣ್ಣ, ವಿರೂಪಾಕ್ಷಗೌಡ್ರು, ಪ್ರಧಾನ ಕಾರ್ಯದರ್ಶಿ ಕೆ.ಎಸ್.ರಾಘವೇಂದ್ರ,, ಮಾಧ್ಯಮ ಸಂಚಾಲಕ ಸತ್ಯನಾರಾಯಣ, ಮಂಡಲ ಅಧ್ಯಕ್ಷ ಕಸೆಟ್ಟಿ ಉಮಾಪತಿ ಸೇರಿದಂತೆ ಇತರರಿದ್ದರು.
ಸಮಾರೋಪ ಸಮಾರಂಭ: ಆನಂತರ ನಡೆದ ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಶಿವಯೋಗಿಸ್ವಾಮಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಚುನಾಯಿತ ಪ್ರತಿನಿಧಿಗಳಿಗೆ ಮಾರ್ಗದರ್ಶನ ನೀಡಿದರು.