ಹೊಸಪೇಟೆ (ವಿಜಯನಗರ): ತಾಲ್ಲೂಕಿನ ನಾಗೇನಹಳ್ಳಿಯಲ್ಲಿ 15 ವರ್ಷಗಳಿಂದ ನೆಲೆಸಿರುವ ಗೂಡಿಸಲು ವಾಸಿಗಳನ್ನು ತೆರವುಗೊಳಿಸುತ್ತಿರುವುದನ್ನು ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಕಾರ್ಯಕರ್ತರು ಬುಧವಾರ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಳಿಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಪುನರ್ವಸತಿ ಕಲ್ಪಿತ ಮಾಜಿ ದೇವದಾಸಿಯರು, ಪರಿಶಿಷ್ಟರು, ಹಿಂದುಳಿದ ವರ್ಗದ ಬಡ, ಕೂಲಿ ಕಾರ್ಮಿಕರು ಸರ್ಕಾರಿ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಅನೇಕ ವರ್ಷಗಳಿಂದ ವಾಸವಾಗಿದ್ದಾರೆ. ಪಟ್ಟಾ ಕೊಡಬೇಕೆಂದು ಜಿಲ್ಲಾಡಳಿತಕ್ಕೆ ಅನೇಕ ಸಲ ಮನವಿ ಸಲ್ಲಿಸಿದ್ದಾರೆ. ಅವರ ಮನವಿ ಪರಿಶೀಲಿಸುವ ಭರವಸೆ ಸಿಕ್ಕಿದೆ. ಇಂತಹ ಸಂದರ್ಭದಲ್ಲಿ ಅವರನ್ನು ಒಕ್ಕಲೆಬ್ಬಿಸುತ್ತಿರುವುದು ಖಂಡನಾರ್ಹ ಎಂದು ತಿಳಿಸಿದರು.
ಎಲ್ಲಾ ಗುಡಿಸಲು ವಾಸಿಗಳಿಗೆ ಹಕ್ಕು ಪತ್ರ ಕೊಡಬೇಕು. ಇಲ್ಲವಾದಲ್ಲಿ ಅನ್ಯ ಕಡೆ ನಿವೇಶನಗಳನ್ನು ಗುರುತಿಸಿ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುವುದು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ, ಕಾರ್ಯದರ್ಶಿ ಕಲ್ಯಾಣಯ್ಯ, ಮುಖಂಡರಾದ ಎಚ್ ಮೊಹಮ್ಮದ್ ಖಾಲಿದ್, ಆಲ್ತಾಫ್ ಮಕಾನದಾರ್, ಮಾಲತೇಶ್, ರೆಹಮಾನ್ ಇದ್ದರು.