ವಿಜಯನಗರ (ಹೊಸಪೇಟೆ): ಉತ್ತರ ಪ್ರದೇಶದಲ್ಲಿ ಅಲ್ಪಸಂಖ್ಯಾತರು, ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತರು ಗುರುವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರದ ಅವಧಿಯಲ್ಲಿ ಉತ್ತರ ಪ್ರದೇಶ ಜಂಗಲ್ರಾಜ್ ಆಗಿ ಬದಲಾಗಿದೆ. ಅಲ್ಪಸಂಖ್ಯಾತರ ವಿರುದ್ಧ ಕೋಮು ಪ್ರಚೋದಿತ ಹಿಂಸಾಚಾರಗಳು ನಡೆದರೆ, ಮೇಲ್ವರ್ಗದವರಿಂದ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ. ಪೊಲೀಸರು ಪಕ್ಷಪಾತಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿದರು.
‘ದಾಖಲೆ ಸಂಖ್ಯೆಯಲ್ಲಿ ಅತ್ಯಾಚಾರದ ಪ್ರಕರಣಗಳು ವರದಿಯಾಗುತ್ತಿವೆ. ಭಾರತದ ಅತ್ಯಾಚಾರದ ರಾಜಧಾನಿ ಎಂಬ ಅಪಖ್ಯಾತಿಗೆ ಗುರಿಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದವರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ಹೂಡಿ ಬಂಧಿಸಲಾಗಿದೆ. ಗೋರಕ್ಷಕರು ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುತ್ತಿದ್ದಾರೆ. ಈಗಾಗಲೇ ಅನೇಕ ಜನ ಹತ್ಯೆಗೀಡಾಗಿದ್ದಾರೆ. ಸಂಘಟನೆಯ ಅನೇಕ ಮುಖಂಡರನ್ನು ಸಹ ಬಂಧಿಸಲಾಗಿದೆ. ಸಾಂವಿಧಾನಿಕ ಹಕ್ಕುಗಳನ್ನು ನಿರಾಕರಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.
‘ಅಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳನ್ನು ತಡೆಯಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿದು, ಇಡೀ ಭಾರತದಾದ್ಯಂತ ಈ ರೀತಿಯ ಪ್ರಕರಣಗಳು ನಡೆಯಬಹುದು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಬ್ಬಾಸ್, ಕಾರ್ಯದರ್ಶಿ ಅಬೂಬಕ್ಕರ್, ಆಸಿಫ್, ರುಕ್ಸಾರ, ಮಹಮ್ಮದಿ, ಖಾಜಾ ಹುಸೇನ್ ನಿಯಾಜಿ, ರಫೀಕ್ ಇದ್ದರು.