ಹಗರಿಬೊಮ್ಮನಹಳ್ಳಿಯಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಮಾಲವಿ ಜಲಾಶಯದ ವಿಜಯೋತ್ಸವ ಹಾಗೂ ಸಾರ್ಥಕ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 15ನೇ ಹಣಕಾಸಿನ ಆಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ ₹5,495 ಕೋಟಿ ವಿಶೇಷ ಅನುದಾನ ಕೇಂದ್ರ ಸರ್ಕಾರ ಕೊಡಬೇಕೆಂದು ಶಿಫಾರಸು ಮಾಡಲಾಗಿದೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್ ಅವರು ಅನುದಾನ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ‘ಆಪರೇಷನ್ ಕಮಲ’ದ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಆ ಅನುದಾನ ತರುವ ತಾಕತ್ತು, ದಮ್ಮು ಇದೆಯೇ? ರಾಜ್ಯದ ಅನೇಕ ಅಭಿವೃದ್ಧಿ ಕೆಲಸಗಳಿಗೆ ಕೇಂದ್ರ ಸರ್ಕಾರ ಅನುದಾನ ಕೊಡುತ್ತಿಲ್ಲ. ರಾಜ್ಯವನ್ನು ಪ್ರತಿನಿಧಿಸುವ 25 ಜನ ಸಂಸದರಿದ್ದರೂ ಏನೂ ಆಗುತ್ತಿಲ್ಲ ಎಂದರು.