ಹೊಸಪೇಟೆ (ವಿಜಯನಗರ): ಸೋಮವಾರ ನಿಧನರಾದ ವಿಶ್ರಾಂತ ಕುಲಪತಿ ಪ್ರೊ. ಎಚ್.ಜೆ. ಲಕ್ಕಪ್ಪಗೌಡರ ಅವರಿಗೆ ಮಂಗಳವಾರ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕುಲಪತಿ ಪ್ರೊ. ಸ.ಚಿ. ರಮೇಶ ಮಾತನಾಡಿ, ‘ಕನ್ನಡ ವಿಶ್ವವಿದ್ಯಾಲಯವನ್ನು ಶೈಕ್ಷಣಿಕ, ಬೌದ್ಧಿಕ ಮತ್ತು ಭೌತಿಕವಾಗಿ ಶ್ರೀಮಂತಗೊಳಿಸಿದ ಮಹಾನ್ ವ್ಯಕ್ತಿ ಲಕ್ಕಪ್ಪಗೌಡರು. ಅವರ ಅಗಲಿಕೆಯಿಂದ ಕನ್ನಡ ವಿಶ್ವವಿದ್ಯಾಲಯದ ಕುಟುಂಬಕ್ಕೆ ತುಂಬಾ ನೋವಾಗಿದೆ’ ಎಂದು ಹೇಳಿದರು.
‘ಕವಿಯಾಗಿ, ವಿಮರ್ಶಕರಾಗಿ, ಪ್ರಾಧ್ಯಾಪಕರಾಗಿ, ಆಡಳಿತಗಾರರಾಗಿ ಅವರು ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಜೊತೆಯಲ್ಲಿ ಸ್ನೇಹಜೀವಿಯಾಗಿದ್ದರು. ಸುಮಾರು 70ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು. ಅವರ ಅಗಲಿಕೆಯಿಂದ ಕನ್ನಡ ವಿಶ್ವವಿದ್ಯಾಲಯವು ಬಡವಾಗಿದೆ’ ಎಂದರು.
ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು.