ವಿಜಯನಗರ (ಹೊಸಪೇಟೆ): ವಿಜಯನಗರ ಜಿಲ್ಲೆಗೆ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿರುವ ಪಿ. ಅನಿರುದ್ಧ ಶ್ರವಣ್ ಅವರು ಸೋಮವಾರ ನಗರಕ್ಕೆ ಬಂದ ಮೊದಲ ದಿನವೇ ಬಿಡುವಿಲ್ಲದಂತೆ ವಿವಿಧ ಇಲಾಖೆಯ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 3ಕ್ಕೆ ನಗರಕ್ಕೆ ಬಂದ ಅವರು, ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹದಲ್ಲಿ ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ಎಚ್. ವಿಶ್ವನಾಥ್ ಅವರೊಂದಿಗೆ ಕೆಲಕಾಲ ಚರ್ಚಿಸಿದರು.
ಬಳಿಕ ಜಿಲ್ಲಾಡಳಿತ ಭವನ ನಿರ್ಮಿಸಲು ಉದ್ದೇಶಿಸಿರುವ ತುಂಗಭದ್ರಾ ಸ್ಟೀಲ್ಸ್ ಪ್ರಾಡಕ್ಟ್ಸ್ (ಟಿಎಸ್ಪಿ) ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿನ ಹಳೆಯ ಕಟ್ಟಡ ವೀಕ್ಷಿಸಿದರು.
ನಂತರ ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.