ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದವರ ಪೈಕಿ ಆರು ಜನ ಸಾವಿಗೀಡಾಗಿರುವ ಪ್ರಕರಣ ಸಂಬಂಧ ಎಂಜಿನಿಯರ್ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತುಗೊಳಿಸಿ ಬುಧವಾರ ಆದೇಶಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ವಿಭಾಗದ ಕಿರಿಯ ಎಂಜಿನಿಯರ್ ವಿಜಯ ನಾಯ್ಕ, ಮಕರಬ್ಬಿ ಪಿಡಿಒ ಶರಣಪ್ಪ ಅಮಾನತುಗೊಂಡವರು. ಕಲುಷಿತ ನೀರು ಸೇವಿಸಿ ಗ್ರಾಮದ 150ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಈ ಪೈಕಿ ಹೆಚ್ಚಿನ ಚಿಕಿತ್ಸೆಗಾಗಿ 33 ಜನರನ್ನು ಹುಬ್ಬಳ್ಳಿ, ದಾವಣಗೆರೆ, ಗದಗ, ಹಾವೇರಿಯ ಆಸ್ಪತ್ರೆಗಳಿಗೆ ಕಳಿಸಿಕೊಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ 10 ದಿನಗಳ ಅಂತರದಲ್ಲಿ 6 ಜನರು ಸಾವಿಗೀಡಾಗಿದ್ದರು.