ವಿಜಯಪುರ: ಇಲ್ಲಿನ ಎಪಿಎಂಸಿ ತರಕಾರಿ ಮಾರುಕಟ್ಟೆ ಆವರಣ ಮತ್ತು ಕಿರಾಣಾ ಬಜಾರದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲಾಡಳಿತವು ಸಾರ್ವಜನಿಕರ ಬಳಕೆಗಾಗಿ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಸ್ಥಾಪಿಸಿದೆ.
ಸ್ಯಾನಿಟೈಜರ್ ಬೂತ್ಗಳನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜೆ.ರವಿಶಂಕರ್, ಸಾರ್ವಜನಿಕರ, ರೈತರ, ಗ್ರಾಹಕರ ಹಾಗೂ ವ್ಯಾಪಾರಸ್ಥರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಸ್ಥಾಪಿಸಿರುವುದು ಉತ್ತಮ ಕೆಲಸ ಎಂದರು.
ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿರುವ ಸ್ಯಾನಿಟೈಜರ್ ಸ್ಪ್ರೇ ಬೂತ್ಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಮತ್ತು ಜಿಲ್ಲಾಸ್ಪತ್ರೆ ಆವರಣದಲ್ಲಿ ಸ್ಥಾಪಿಸುವಂತೆ ಅವರು ಸೂಚಿಸಿದರು.
ಸಾರ್ವಜನಿಕರು ಕೂಡ ಅಗತ್ಯ ಮುನ್ನೆಚ್ಚರಿಕೆಗಳೊಂದಿಗೆ ಇದರ ಸದುಪಯೋಗ ಪಡೆಯಬೇಕು. ಕೊರೊನಾ ಸೋಂಕು ಹರಡದಂತೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಿದರು.
ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಎ.ಪಿ.ಎಂ.ಸಿ ಉಪ ಕಾರ್ಯದರ್ಶಿ ಕುಮಾರಸ್ವಾಮಿ, ಸಹಾಯಕ ನಿರ್ದೇಶಕ ಚಬನೂರ ಉಪಸ್ಥಿತರಿದ್ದರು.