ವಿಜಯಪುರ: ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳ ನಡುವೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ವಿಜಯಪುರ ಕೇಂದ್ರ ಕಾರಗೃಹದಲ್ಲಿ ಸದ್ಯ ಇರುವ 425 ಕೈದಿಗಳ ಪೈಕಿ 50 ಕೈದಿಗಳನ್ನು ಬಾಗಲಕೋಟೆ, 25 ಕೈದಿಗಳನ್ನು ಜಮಖಂಡಿ ಮತ್ತು 100 ಕೈದಿಗಳನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.
ಕೈದಿಗಳನ್ನು ಭೇಟಿ ಮಾಡಲು ಜೈಲಿಗೆ ಬರುವ ಅವರ ಸಂಬಂಧಿಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ತಿಳಿಸಿದರು.
50 ಕೈದಿಗಳ ಬಿಡುಗಡೆ:
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ 50 ಕೈದಿಗಳನ್ನು ಪೆರೋಲ್, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಕಣ್ಗಾವಲು:
ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೋವಿಡ್–19 ದೃಢಪಟ್ಟಿರುವುದರಿಂದ ಜಿಲ್ಲೆಯ ಗಡಿಭಾಗಗಳಲ್ಲಿ 29 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ, ಕಣ್ಗಾವಲು ಹೆಚ್ಚಿಸಲಾಗಿದೆ. ಅಲ್ಲದೇ, ಜನ ಸಂಚಾರಕ್ಕೆ ಮತ್ತಷ್ಟು ನಿರ್ಬಂಧ ವಿಧಿಸಲಾಗಿದೆ. ತಪಾಸಣೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ ಎಂದು ಹೇಳಿದರು.