ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಜಿಲ್ಲೆಯಲ್ಲಿ 15 ಕೋವಿಡ್‌ ಕೇರ್‌ ಸೆಂಟರ್: ಸಚಿವೆ ಶಶಿಕಲಾ ಜೊಲ್ಲೆ

60 ವರ್ಷದೊಳಗಿನ ರೋಗಿಗಳಿಗೆ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ
Last Updated 13 ಜುಲೈ 2020, 15:22 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ 15 ಕೋವಿಡ್ ಕೇರ್ ಸೆಂಟರ್‌ಗಳನ್ನು ಆರಂಭಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ರೋಗಿಗಳಿಗೆ ಯಾವುದೇಲೋಪವಾಗದಂತೆ ಚಿಕಿತ್ಸೆ ಹಾಗೂ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಕೋವಿಡ್-19 ಪಾಸಿಟಿವ್ ದೃಢಪಟ್ಟ 60 ವರ್ಷದೊಳಗಿನ ರೋಗಿಗಳಿಗೆ ಹೋಂ ಐಸೊಲೇಷನ್ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ವ್ಯವಸ್ಥಿತ ಚಿಕಿತ್ಸೆ ನೀಡುವಂತೆ ಅವರು ತಿಳಿಸಿದರು.

ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಲ್ಲಿ ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆ ಹೆಚ್ಚಾದಲ್ಲಿ ತಕ್ಷಣ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದರು.

ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಮುಂದಾಗಿದ್ದು, ಅಧಿಕಾರಿಗಳು ಈ ಆಸ್ಪತ್ರೆಗಳಿಗೆ ಭೇಟಿ ನೀಡಿ ವೆಂಟಿಲೇಟರ್, ಬೆಡ್, ಸ್ವಚ್ಛತೆ ಕುರಿತು ಪರಿಶೀಲಿಸಬೇಕು. ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಬೇಕು ಎಂದು ಹೇಳಿದರು.

ವಿವಿಧ ರಾಜ್ಯಗಳಿಂದ ಆಗಮಿಸಿದ ಕಾರ್ಮಿಕರಿಗೆ ಹಾಗೂ ವಲಸಿಗರಿಗೆ ಸಾಂಸ್ಥಿಕ ಕ್ವಾರಂಟೈನ್ ಮಾಡುವುದರ ಬದಲಿಗೆ ಹೋಂಕ್ವಾರಂಟೈನ್ ಮಾಡಬೇಕು ಹಾಗೂ ಕ್ವಾರಂಟೈನ್ ಮಾಡಲಾದ ವ್ಯಕ್ತಿಗಳು ಹೊರಗೆ ಓಡಾಡದಂತೆ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ತಿಳಿಸಬೇಕು. ಗ್ರಾಮೀಣ ಮಟ್ಟದ ಸಮಿತಿಗಳನ್ನು ಬಳಸಿಕೊಂಡು ಸೂಕ್ತ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಸಿ.ಎಂ ಗಮನಕ್ಕೆ:ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಅಭಿಪ್ರಾಯದಂತೆ ಜಿಲ್ಲೆಯಾದ್ಯಂತ ಒಂದು ವಾರ ಲಾಕ್‍ಡೌನ್ ಮಾಡಲು ಉದ್ದೇಶ ಹೊಂದಲಾಗಿತ್ತು. ಆದರೆ, ಮುಖ್ಯಮಂತ್ರಿ ಅವರು ಇದಕ್ಕೆ ಸಹಮತ ವ್ಯಕ್ತಪಡಿಸದ ಕಾರಣ ಲಾಕ್‌ಡೌನ್‌ ಮಾಡುತ್ತಿಲ್ಲ. ಭಾಗಶಃ ಲಾಕ್‌ಡೌನ್‌ ಇರಲಿದೆ. ಜಿಲ್ಲಾದ್ಯಂತ ಸಂಪೂರ್ಣ ಲಾಕ್‍ಡೌನ್ ಮಾಡುವ ಕುರಿತು ಮತ್ತೊಮ್ಮೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಹೇಂದ್ರ ಕಾಪ್ಸೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಉಪಸ್ಥಿತರಿದ್ದರು.

ಲಾಕ್‌ಡೌನ್‌ ಮಾಡಿ: ಶಿವಾನಂದ ಪಾಟೀಲ

ಜಿಲ್ಲೆಯಲ್ಲಿ ಕೋವಿಡ್ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಲಾಕ್‍ಡೌನ್ ಮಾಡುವ ಅವಶ್ಯತೆ ಹಾಗೂ ಅನಿವಾರ್ಯತೆ ಉಂಟಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು.

ಸಾರ್ವಜನಿಕರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿಬೇಕು. ಹಿಂದಿನ ಲಾಕ್‍ಡೌನ್ ಸಂದರ್ಭದ ಸಾಧಕ-ಬಾಧಕಗಳನ್ನು ಗಮನದಲ್ಲಿಟ್ಟುಕೊಂಡು, ಯಾವುದೇ ತೊಂದರೆಗಳು ಮರುಕಳಿಸದಂತೆ ವ್ಯವಸ್ಥಿತ ರೀತಿಯಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್ ಮಾಡಬೇಕು ಎಂದು ಒತ್ತಾಯಿಸಿದರು.

ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿರುವ ವೈದ್ಯರಿಗೆ ತಿಂಗಳ ಭತ್ಯೆ ಕಡಿಮೆ ಇದ್ದು, ಹೆಚ್ಚಿನ ಭತ್ಯೆ ನೀಡುವಂತಾಗಬೇಕು. ಜಿಲ್ಲೆಯಲ್ಲಿ ಈಗಿರುವ ಟ್ರೂನ್ಯಾಟ್ ಲ್ಯಾಬ್ ಪರೀಕ್ಷಾ ಸಾಮರ್ಥ್ಯ ಕಡಿಮೆ ಇದ್ದು, ಹೆಚ್ಚಿನ ಸಾಮರ್ಥ್ಯ ಹೊಂದಿರುವ ಲ್ಯಾಬ್ ವ್ಯವಸ್ಥೆ ಅತೀ ವೇಗವಾಗಿ ನಿರ್ಮಿಸುವ ಅಗತ್ಯತೆ ಇದೆ ಎಂದರು.

ಲಾಕ್‌ಡೌನ್‌ ಇಲ್ಲ: ಕಾರಜೋಳ

ವಿಜಯಪುರ: ಕೋವಿಡ್‌ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯು ರೆಡ್‌ ಜೋನ್‌ನಲ್ಲಿ ಇಲ್ಲದಿರುವ ಕಾರಣ ಸದ್ಯ ಸಂಪೂರ್ಣ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್‌ ಮಾಡುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದರು.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಜೊತೆಜೊತೆಗೆ ಬದುಕುವುದನ್ನು ರೂಢಿಸಿಕೊಳ್ಳಬೇಕಾಗಿರುವುದು ಅನಿವಾರ್ಯ. ಕೊರೊನಾಗೆ ಅಂಜಿ ಬಾಗಿಲು ಹಾಕಿಕೊಳ್ಳಲು ಆಗದು. ಎಚ್ಚರಿಕೆ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT