ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಭರದಿಂದ ಸಾಗಿದ್ದು, ಮುಂದಿನ ಮಾರ್ಚ್ ಅಥವಾ ಏಪ್ರಿಲ್ಗೆ ಪೂರ್ಣಗೊಂಡು ವಿಮಾನಗಳು ಹಾರಾಟ ನಡೆಸಲಿವೆ ಎಂದು ಸಂಸದ ರಮೇಶ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಹೊರವಲಯದ ಬುರಾಣಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಗುರುವಾರ ವೀಕ್ಷಿಸಿದ ಅವರು, ಸರ್ಕಾರ ವಿಮಾನ ನಿಲ್ದಾಣವನ್ನು ಏರ್ಬಸ್-320 ಮೇಲ್ದರ್ಜೆಗೇರಿಸಿರುವುದರಿಂದ ಕಾಮಗಾರಿಗಳು ವೇಗ ಪಡೆದುಕೊಂಡಿದೆ ಎಂದು ಅವರು ಹೇಳಿದರು.
ವಿಜಯಪುರ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮಕ್ಕೆ ಉತ್ತೇಜನ, ಜಿಲ್ಲೆಯ ಆಮದು-ರಫ್ತು ವ್ಯವಹಾರ, ವ್ಯಾಪಾರ ವಹಿವಾಟು, ಸರಕು-ಸಾಗಾಣಿಕೆ ವ್ಯವಸ್ಥೆ ಸೇರಿದಂತೆ ಜಿಲ್ಲೆಯ ಅಭಿವೃದ್ದಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಪಾಟೀಲ, ಲೋಕೋಪಯೋಗಿ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್ ರಾಜು ಮುಜುಂದಾರ, ಸಹಾಯಕ ಎಂಜಿನಿಯರ್ ರೇವಣ್ಣ ಮಸಳಿ, ಗುತ್ತಿಗೆದಾರ ಸಿ.ಬಿ.ಆಲೂರ, ಶರವಣನ್ ಇದ್ದರು.