ವಿಜಯಪುರ: ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಮಳೆ ಅಧಿಕವಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಗುರುವಾರ ಸಂಜೆಯಿಂದ ಎಲ್ಲ ಗೇಟುಗಳನ್ನು ತೆರೆದು 1.75 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಅಣೆಕಟ್ಟೆಯ ಕೆಳಭಾಗದ ಬಾಧಿತವಾಗುವ ಎಲ್ಲಾ ಗ್ರಾಮ ಹಾಗೂ ನಗರಗಳ ಸಾರ್ವಜನಿಕರು ಎಚ್ಚರಿಕೆಯಿಂದಿದ್ದು, ಜನ-ಜಾನುವಾರು, ಪಂಪ್ ಸೆಟ್ಗಳು ಹಾಗೂ ಆಸ್ತಿ-ಪಾಸ್ತಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿಕೊಳ್ಳುವಂತೆ ಆಲಮಟ್ಟಿ ಜಲಾಶಯದ ಕಾರ್ಯನಿರ್ವಾಹಕ ಎಂಜಿನಿಯರ್ ಮೋಹನ್ ಆರ್.ಹಲಗತ್ತಿ ಮನವಿ ಮಾಡಿಕೊಂಡಿದ್ದಾರೆ.
ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಪ್ರವಾಹದ ಪರಿಸ್ಥಿತಿಯ ಮೇಲೆ ಹೆಚ್ಚಿನ ನಿಗಾವಹಿಸಲಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣಕ್ಕನುಗುಣವಾಗಿ ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ.