ವಿಜಯಪುರ: ಈಗಿರುವ ಪ್ರೋತ್ಸಾಹ ಧನ ಮತ್ತು ಗೌರವ ಧನ ಎರಡನ್ನೂ ಒಂದುಗೂಡಿಸಿ ಮಾಸಿಕ ₹12 ಸಾವಿರ ಗೌರವಧನ ನಿಗದಿ ಮಾಡಬೇಕು. ಕೋವಿಡ್ ಸೋಂಕಿನಿಂದ ರಕ್ಷಣೆಗೆ ರಕ್ಷಾ ಕವಚದ ಪರಿಕರಗಳನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಗುರುವಾರ ಏಳು ದಿನ ಪೂರೈಸಿತು.
ಜಿಲ್ಲೆಯ ವಿವಿಧ ಪಿಎಚ್ಸಿ ಮತ್ತು ಸಿಎಚ್ಸಿ ಹಾಗೂ ಇತರ ಆರೋಗ್ಯ ಕೇಂದ್ರಗಳ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜುಲೈ 17ರಂದು ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬ ಸದಸ್ಯರೊಂದಿಗೆ ತಮ್ಮ, ತಮ್ಮ ಮನೆಗಳ ಮುಂದೆ ಪ್ರತಿಭಟನೆ ಧರಣಿ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಚ್. ಟಿ.,ಜಿಲ್ಲಾ ಕಾರ್ಯದರ್ಶಿ ಭಾರತಿ ದೇವಕತೆ ತಿಳಿಸಿದ್ದಾರೆ.