ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್‌ ಸಲಹೆ
Last Updated 30 ನವೆಂಬರ್ 2022, 15:33 IST
ಅಕ್ಷರ ಗಾತ್ರ

ವಿಜಯಪುರ: ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆ ತಡೆಯಲು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್‌ ಹೇಳಿದರು.

ನಗರದ ಕಂದಗಲ್‌ ಹನುಮಂತರಾಯ ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ದೇಶದ ಪ್ರಥಮ ಪ್ರಧಾನಿ ಪಂ.ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ವಿದ್ಯಾರ್ಥಿ ಜೀವನ ಬಂಗಾರದ ಜೀವನ, ಸುಂದರ ಕನಸನ್ನು ಹೆಣೆದು ಆ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ವಿದ್ಯಾರ್ಜನೆ ಮಾಡಬೇಕು ಎಂದರು‌.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಮಾತನಾಡಿ, ವಿದ್ಯಾರ್ಥಿಗಳ ಗುರಿ ಹೆಮ್ಮರವಾಗಿರಬೇಕು. ಈ ಗುರಿಯಡೆಗೆ ಸಾಗಲು ಛಲ ಹೊಂದಿರಬೇಕು. ಕಠಿಣ ಪರಿಶ್ರಮದಿಂದ ಸಾಧನೆಯ ಶಿಖರ ತಲುಪಬಹುದು. ಆ ದಿಸೆಯಲ್ಲಿ ಗುರಿ ಹಾಕಿಕೊಂಡು ಸಾಗಿದರೆ ಯಶಸ್ಸು ಕಟ್ಟಿಟ್ಟಬುತ್ತಿ. ಕನಸಿಗೆ ಮಿತಿ ಇರಬಾರದು ಉನ್ನತ ಕನಸು ಕಂಡು, ಗುರಿ ಮುಟ್ಟಿ ಸಾಧಿಸಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ. ಹೊಸಮನಿ ಅವರು ಮಾತನಾಡಿ, ಸಂವಿಧಾನ ಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸಮಾಜದ ಗುರುತರ ಹೊಣೆಯಿದೆ. ಮಕ್ಕಳ ಪಾಲಕರು ಮತ್ತು ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.

ಬಸವನ ಬಾಗೇವಾಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪುರ, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಉಪನ್ಯಾಸ ನೀಡಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಬಾಲ ಮಂದಿರ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ಆಡಳಿತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಉಮೇಶ ಎಸ್ ಶಿರಹಟ್ಟಿಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ನಿರ್ಮಲಾ ಗುತ್ತರಗಿಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ್ ಜೋಗೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ‌‌, ಗುರುರಾಜ ಇಟಗಿ, ಮೌನೇಶ ಪೋತದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT