ವಿಜಯಪುರ: ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಏಪ್ರಿಲ್ 16ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಹೇಳಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಕ್ಕೆ ನಗರದ ಎಂ.ಜಿ.ರಸ್ತೆಯ ಲಕ್ಷ್ಮಿ ಗುಡಿ ಬಳಿ ಇರುವ ಬಿಜೆಪಿ ಪ್ರಚಾರ ಕಾರ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್ಯಾಲಿ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದರು.
ಬಿಜೆಪಿ ಮುಖಂಡರಾದ ಸಿ.ಟಿ.ರವಿ, ಶಾಸಕ ಅರವಿಂದ ಬೆಲ್ಲದ, ಸಂಸದ ಉಮೇಶ ಜಾದವ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಮಾಜಿ ಸಚಿವ ಹಾಲಪ್ಪ ಆಚಾರ್, ಜಗದೀಶ ಹಿರೇಮನಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ನಾಮಪತ್ರ ಸಲ್ಲಿಸಿದ ನಂತರ ನಗರದ ದರಬಾರ ಮೈದಾನದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು, ಮುಖಂಡರು, ಜಿಗಜಿಣಗಿ ಅವರ ಅಭಿಮಾನಿಗಳು, ಹಿತೈಷಿಗಳ ಬೃಹತ್ ಸಮಾವೇಶ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.