ವಿಜಯಪುರ: ಪೌರಕಾರ್ಮಿಕರಿಗೆ ಸರ್ಕಾರದಿಂದ ಹಾಗೂ ಮಹಾನಗರ ಪಾಲಿಕೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಹೇಳಿದರು.
ನಗರದ ಭಾರತೀಯ ಜೀವ ವಿಮಾ ನಿಗಮದ ಮುಂಭಾಗದಲ್ಲಿ ಡಿ. ಆರ್. ಮಮದಾಪುರ ಪರಿವಾರದ ವತಿಯಿಂದ ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಜನರು ಆರೋಗ್ಯಕರವಾಗಿರಲು ಪೌರಕಾರ್ಮಿಕರ ಕೊಡುಗೆ ಅಪಾರವಾಗಿದ್ದು ಅಂತಹ ಪೌರಕಾರ್ಮಿಕರಿಗೆ ಸನ್ಮಾನಿಸುತ್ತಿರುವ ಮಮದಾಪುರ ಪರಿವಾರದವರ ಕಾರ್ಯ ಶ್ಲಾಘನೀಯ ಎಂದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯ್ ಮೆಕ್ಕಳಕಿ ಮಾತನಾಡಿ, ನಗರದ ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗುವಂತಹ ಯೋಜನೆಗಳು ಹಾಗೂ ಸೌಲಭ್ಯಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಡಿ.ಆರ್. ಮಮದಾಪುರ್ ಮಾತನಾಡಿ, ಪ್ರತಿನಿತ್ಯ ಎಲ್ಲರ ಮನೆ ಬಾಗಿಲಿಗೆ ಹೋಗಿ, ಕಸ ಸಂಗ್ರಹಿಸಿ ನಗರವನ್ನು ಸ್ವಚ್ಛವಾಗಿರಿಸುತ್ತಿರುವ ಪೌರಕಾರ್ಮಿಕರ ಕಾರ್ಯ ಶ್ಲಾಘನೀಯ ಎಂದರು.
ಯಾರೂ ಮಾಡದ ಕೆಲಸ ಪೌರಕಾರ್ಮಿಕರು ಮಾಡುತ್ತಾರೆ. ಅವರು ತಮ್ಮ ಕೆಲಸದ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ ಎಂದು ತಿಳಿಸಿದರು.