ವಿಜಯಪುರ: ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಆಲಮೇಲ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಿಗೆ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೊರಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮದರಿ ಗ್ರಾಮದಲ್ಲಿ ನಿರ್ಮಾಣವಾದ ಅಂಗವಾಡಿ ಕೇಂದ್ರಕ್ಕೆ ಭೇಟಿ ನೀಡಿ, ‘ಪಿಒಪಿ ಸೇರಿದಂತೆ ಬಾಕಿಯಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಹಾಗೂ ಅಂಗನವಾಡಿ ಮುಂದೆ ಖಾಲಿಯಿರುವ ಸ್ಥಳದಲ್ಲಿ ಫೇವರ್ಸ್, ಆಟದ ಮೈದಾನ, ಜಾರು ಬಂಡಿಯಂತಹ ಮಕ್ಕಳಿಗೆ ಅನುಕೂಲಕರವಾದ ಆಟಿಕೆಗಳನ್ನು ಅಳವಡಿಸಿ, ಸಸಿಗಳನ್ನು ನೆಡಬೇಕು’ ಎಂದು ಸ್ಥಳದಲ್ಲಿದ್ದ ಪಿಆರ್ಇಡಿ ಎಂಜಿನಿಯರ್ ಜಿ.ವೈ.ಮುರಾಳ ಅವರಿಗೆ ಸೂಚಿಸಿದರು.
ಗ್ರಾಮದಲ್ಲಿರುವ ಅರೋಗ್ಯ ಉಪ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದರು. ಸಿಬ್ಬಂದಿ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಕ್ತ ಕ್ರಮ ಕೈಗೊಳ್ಳಲು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ನೂತನವಾಗಿ ನಿರ್ಮಾಣ ಮಾಡಲಾದ ಸಿಂದಗಿ- ಗಣಿಹಾರ ಡಾಂಬರ್ ರಸ್ತೆಯ ಅಳತೆ ಮತ್ತು ಗುಣಮಟ್ಟ ಪರಿಶೀಲನೆ ನಡೆಸಿ, ಗ್ರಾಮೀಣ ಭಾಗದಲ್ಲಿ ಜನರಿಗೆ ಅನುಕೂಲಕರವಾಗುವಂತೆ ಉತ್ತಮ ಗುಣ್ಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ತಿಳಿಸಿದರು.
ಆಲಮೇಲ ಪಟ್ಟಣದಲ್ಲಿರುವ ಸಮುದಾಯ ಅರೋಗ್ಯ ಕೇಂದ್ರ, ರಕ್ತ ತಪಾಸಣಾ ಕೇಂದ್ರ, ಆರ್ಎನ್ಟಿಸಿಪಿ, ನೇತ್ರ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಿ, ಆರೋಗ್ಯ ಕೇಂದ್ರದಲ್ಲಿ ಸಿಗುವ ವಿವಿಧ ಸೌಲಭ್ಯಗಳ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ನಂತರ ಸಿಬ್ಬಂದಿ ಹಾಜರಾತಿ ಪರಿಶೀಲಿಸಿ, ಮಂಜೂರಾದ ಹುದ್ದೆ, ಖಾಲಿಯಿರುವ ಹುದ್ದೆಗಳ ಮಾಹಿತಿ ಪಡೆದರು.
ಆಸ್ಪತ್ರೆಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದರು. ನಂತರ ಸೊನ್ನ ಬ್ಯಾರೇಜ್ಗೆ ಭೇಟಿ ನೀಡಿ, ನೀರಿನ ಮಟ್ಟ ಪರಿಶೀಲನೆ ನಡೆಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪುರ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್.ಆರ್.ಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಸವರಾಜ ಜಿಗಳೂರ, ಜಿಲ್ಲಾ ಪಂಚಾಯಿತಿ ಅರುಣಕುಮಾರ ದಳವಾಯಿ, ಪೃಥ್ವಿರಾಜ್ ಪಾಟೀಲ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.