ವಿಜಯಪುರ: ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹದಿಂದ ಬಾಧಿತವಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮೊಟಕುಗೊಳಿಸಿದರು.
ಆಲಮಟ್ಟಿಯಲ್ಲಿ ಅಧಿಕಾರಿಗಳೊಂದಿಗೆ ನಡೆಯಬೇಕಾಗಿದ್ದ ಪ್ರವಾಹ ಪರಿಶೀಲನೆ ಸಭೆಯೂ ಸಿಎಂ ಬಾರದ ಕಾರಣ ರದ್ದುಗೊಂಡಿತು. ಸಿಎಂ ಬಾರದೇ ಇರುವುದಕ್ಕೆ ಜಿಲ್ಲೆಯ ಪ್ರವಾಹ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದರು.
ಸಿಎಂ ಆಗಮನದ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ದಿನಗಳಿಂದ ಸಿದ್ದತೆ ಮಾಡಿಕೊಂಡಿದ್ದರು. ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಧಿಕಾರಿಗಳು ಆಲಮಟ್ಟಿಯಲ್ಲಿ ಠಿಕಾಣಿ ಹೂಡಿದ್ದರು. ಸಿಎಂಗೆ ಮನವಿ ಕೊಡಲು ಶಾಸಕರು, ಮುಖಂಡರು ಕಾದುಕುಳಿತಿದ್ದರು. ಸಭೆ ರದ್ದಾದ ಕಾರಣ ನಿರಾಸೆಯಿಂದ ತೆರಳಿದರು.
ಈ ಕುರಿತು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಹವಾಮಾನ ವೈಪರೀತ್ಯದಿಂದ ಸಿಎಂ ವೈಮಾನಿಕ ಸಮೀಕ್ಷೆ ಸಾಧ್ಯವಾಗಿಲ್ಲ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಗಮನಕ್ಕೆ ತರುತ್ತೇನೆ ಎಂದರು.
ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಂಬಂಧಿಸಿದಂತೆ ₹636 ಕೋಟಿ ಪರಿಹಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಭೀಮಾ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಮೂಲಕ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.