ಸಿಂದಗಿ: ಕಾಂಗ್ರೆಸ್ ದಿನದಿಂದ ದಿನಕ್ಕೆ ಅಧೋಗತಿಗೆ ಇಳಿಯುತ್ತಿದೆ. ಮೇಘಾಲಯ, ತ್ರಿಪುರಾ, ನಾಗಾಲ್ಯಾಂಡ್ ಗಳಲ್ಲಿ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಂಡು ಎಲ್ಲಿದೆ ಎಂದು ಹುಡುಕುವ ಪರಿಸ್ಥಿತಿಗೆ ಬಂದಿದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಐಸಿಯೂ ನಲ್ಲಿದೆ. ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ ಹಲವರು ಐಸಿಯೂನಿಂದ ಹೊರತರಲು ಪ್ರಯತ್ನಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ಪಟ್ಟಣದಲ್ಲಿ ಶನಿವಾರ ನಡೆದ ವಿಜಯಸಂಕಲ್ಪ ಯಾತ್ರೆಗೆ ಮೊದಲು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದ ನಾಲ್ಕು ದಿಕ್ಕುಗಳಿಂದ ಬಿಜೆಪಿ ಆರಂಭಿಸಿದ ಸಂಕಲ್ಪ ಯಾತ್ರೆ ಬಾರಿ ಬದಲಾವಣೆಗೆ ದಾರಿಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಪ್ರಧಾನಿ ಮೋದಿಯವರ ಎಂಟು ವರ್ಷದ ಸಾಧನೆಯನ್ನು ಇದೀಗ ಜನರ ಮುಂದೆ ಇಡುತ್ತಿದ್ದೇವೆ. ಡಬಲ್ ಎಂಜಿನ್ ಸರ್ಕಾರದ ಸಾಧನೆಗಳಿಂದ ನಮಗೆ ಬೆಂಬಲ ದೊರೆತಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ದೇಶದ 130 ಕೋಟಿ ಜನರಿಗೆ ಉಚಿತ ಲಸಿಕೆ ನೀಡುವುದರ ಮೂಲಕ ಮೋದಿ ಭಾರತವನ್ನು ಕೊರೊನಾ ಮುಕ್ತವನ್ನಾಗಿ ಮಾಡಿದ್ದಾರೆ ಎಂದರು.
ಸಚಿವ ಗೋವಿಂದ ಕಾರಜೋಳ ಮಾತನಾಡಿ, ಶೀಘ್ರವೇ ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆ ಆಗಲಿದೆ. ಬೆಂಗಳೂರು-ಮೈಸೂರು ಹೆದ್ದಾರಿ ನಾವು ಮಾಡಿದ್ದು ಎಂಬ ಕಾಂಗ್ರೆಸ್, ಜೆಡಿಎಸ್ ಹೇಳಿಕೆ ವಿಚಾರವಾಗಿ ಜಂಗಮರ ಕನಸಿನ ಕಥೆ ಹೇಳಿದರು.
ನಂತರ ವಿಜಯ ಸಂಕಲ್ಪ ಯಾತ್ರೆ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಅಂಬಿಗರ ಚೌಡಯ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಂದಾಳ ರಿಂಗ್ ರೋಡ್ , ಸ್ವಾಮಿ ವಿವೇಕಾನಂದ ವೃತ್ತ, ಕಾಲೇಜು ರಸ್ತೆ ಮಾರ್ಗವಾಗಿ ಬಸವೇಶ್ವರ ವೃತ್ತ ತಲುಪಿ ಅಲ್ಲಿ ಸಾರ್ವಜನಿಕ ಸಭೆ ಜರುಗಿತು.
ಸಂಸದ ರಮೇಶ ಜಿಗಜಿಣಗಿ, ಸಚಿವ ಮುರುಗೇಶ, ಲಕ್ಷ್ಮಣ ಸವದಿ, ಶಾಸಕ ರಮೇಶ ಭೂಸನೂರ, ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕ ಅಧ್ಯಕ್ಷೆ ಗೀತಾ ವಿವೇಕಾನಂದ, ಅಪ್ಪುಗೌಡ ಪಾಟೀಲ, ಮಲ್ಲಿಕಾರ್ಜುನ ಜೋಗೂರ, ವಿವೇಕಾನಂದ ಡಬ್ಬಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.