ಹೊಸಪೇಟೆ (ವಿಜಯನಗರ): ತಾಲ್ಲೂಕಿನ ಮಲಪನಗುಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಗ್ರಾಮದಲ್ಲಿ ಕೋವಿಡ್ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಲಾಯಿತು.
ನೋಡಲ್ ಅಧಿಕಾರಿ ಎಂ. ಉಮೇಶ್ ಮಾತನಾಡಿ, ‘ಒಂದು ವಾರದಲ್ಲಿ ಮಲಪನಗುಡಿ ಪಂಚಾಯಿತಿ ವ್ಯಾಪ್ತಿಯಲ್ಲಿ 76 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಎಲ್ಲರೂ ಸರ್ಕಾರದ ಮಾರ್ಗಸೂಚಿ ಅನುಸರಿಸಬೇಕು. ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿಕೊಂಡು ಓಡಾಡಬೇಕು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ವೈದ್ಯ ಡಾ. ಮಂಜುನಾಥ್, ‘ಕೊರೊನಾ ಹರಡದಂತೆ ತಡೆಯಬೇಕಾದರೆ ಸಮುದಾಯದ ಸಹಭಾಗಿತ್ವ ಅತ್ಯವಶ್ಯಕ. ಪಂಚಾಯಿತಿಯ ವ್ಯಾಪ್ತಿಯ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಇದುವರೆಗೆ ಶೇ 49 ಜನರಷ್ಟೇ ಲಸಿಕೆ ಹಾಕಿಸಿಕೊಂಡಿದ್ದಾರೆ. ವೈದ್ಯಕೀಯ ಸಿಬ್ಬಂದಿ ಗ್ರಾಮಸ್ಥರ ಮನವೊಲಿಸಿ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಬೇಕು’ ಎಂದು ತಿಳಿಸಿದರು.
ಪಂಚಾಯಿತಿ ಅಧ್ಯಕ್ಷ ಗಾಳೆಪ್ಪ, ಉಪಾಧ್ಯಕ್ಷ ವಿರೂಪಾಕ್ಷ ನಾಯಕ, ಕಂದಾಯ ಇಲಾಖೆಯ ಇನ್ಸ್ಪೆಕ್ಟರ್ ಅನಿಲ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.