ವಿಜಯಪುರ: ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ವತಿಯಿಂದ ಲಿಂಬೆ ಹಣ್ಣಿನ ಆನ್ಲೈನ್ ಮಾರ್ಕೆಂಟಿಗ್ ಮತ್ತು ಟ್ರೇಡಿಂಗ್ ವ್ಯವಸ್ಥೆ ಜಾರಿ ಮಾಡಲು ಹಾಗೂ ಲಿಂಬೆ ಹಣ್ಣಿನ ಸಂರಕ್ಷಣೆಗಾಗಿ ಕೋಲ್ಡ್ ಸ್ಟೋರೇಜ್ ಸ್ಥಾಪಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರಿನ ಲಾಲ್ಬಾಗ್ನಲ್ಲಿರುವ ತೋಟಗಾರಿಕೆ ಕಚೇರಿಯಲ್ಲಿ ತೋಟಗಾರಿಕೆ ಸಚಿವಡಾ.ಕೆ.ಸಿ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಯಿತು.
ಮಂಡಳಿಗೆ ಈವರೆಗೆ ಮಂಜೂರಾದ ₹4.30 ಕೋಟಿ ಅನುದಾನದಲ್ಲಿ ಲಿಂಬೆ ಬೆಳೆಗಾರರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಹಾಗೂ ಮಂಡಳಿಯ ಮೂಲಕ ರಾಷ್ಟ್ರೀಯ, ಅಂತರರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಲು ನಿರ್ಧರಿಸಲಾಯಿತು.
ಮಂಡಳಿಯ ಕೇಂದ್ರ ಕಚೇರಿಯಿರುವ ಇಂಡಿ ಪಟ್ಟಣದಲ್ಲಿ ವರ್ಷದಲ್ಲಿ ಒಂದು ಬಾರಿ ಸಭೆ ನಡೆಸುವ, ಮೂರು ತಿಂಗಳಿಗೊಮ್ಮೆ ಮಂಡಳಿಯ ಸಭೆ ನಡೆಸುವ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಗೆ ಇಂಡಿಯಲ್ಲಿ ಮೂಲ ಸೌಕರ್ಯಗಳೊಂದಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಶಾಸಕ ಯಶವಂತರಾಯಗೌಡ ಪಾಟೀಲ, ತೋಟಗಾರಿಕೆ ಇಲಾಖೆ ಹೆಚ್ಚುವರಿ ನಿರ್ದೇಶಕರು, ವಿಜಯಪುರ ತೋಟಗಾರಿಕೆ ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.