ವಿಜಯಪುರ: ಆಲಮಟ್ಟಿ ಕೆಬಿಜಿಎನ್ಎಲ್ ಗಾರ್ಡನ್ ‘ಡಿ’ ಗ್ರೂಪ್ ನೌಕರರ ಐದು ತಿಂಗಳ ಬಾಕಿ ವೇತನ ನೀಡುವುದು ಸೇರಿದಂತೆ ವಿವಿಧಸಮಸ್ಯೆ ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಎಸ್ಯುಸಿಐ–ಸಿ ಪಕ್ಷದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್.ಟಿ. ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊವಿಡ್-19 ಸಂದರ್ಭದಲ್ಲಿ ಕಾರ್ಮಿಕರ ವೇತನ ಬಾಕಿ ಉಳಿಸಿಕೊಳ್ಳದೆ ಪ್ರತಿ ತಿಂಗಳು ಪಾವತಿಸಲು ನಿರ್ದೇಶನ ನೀಡಿದ್ದರೂ ಸಹ ಜಿಲ್ಲೆಯ ಆಲಮಟ್ಟಿ ಗಾರ್ಡನ್ನಲ್ಲಿ ಕೆಲಸ ಮಾಡುವ ಕಾರ್ಮಿಕರ ಐದು ತಿಂಗಳ ವೇತನ ಬಾಕಿ ಉಳಿಸಿಕೊಂಡಿದ್ದು, ಅವರು ಕುಟುಂಬದ ನಿರ್ವಹಣೆ ಕಷ್ಟವಾಗಿದೆ ಎಂದು ಹೇಳಿದರು.
ಬಾಕಿ ಇರುವ ವೇತನ, ಸಮವಸ್ತ್ರ ಮತ್ತು ಪ್ರತ್ಯೇಕ ವಿಶ್ರಾಂತಿ ಕೊಠಡಿ ಒದಗಿಸಬೇಕು ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅವರು ಆಲಮಟ್ಟಿ ಕೆಬಿಜಿಎನ್ಎಲ್ನ ಮುಖ್ಯ ಎಂಜಿನಿಯರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದಾಗ ಒಂದು ವಾರದೊಳಗೆ ಕಾರ್ಮಿಕರ ಖಾತೆಗೆ ಹೆಚ್ಚಳವಾದ ವೇತನದೊಂದಿಗೆ ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.
ಸಂಘದ ಉಪಾಧ್ಯಕ್ಷ ದ್ಯಾಮಣ್ಣ ಬಿರಾದಾರ, ಸದಸ್ಯರಾದ ಮೀನಾಕ್ಷಿ ರಾಠೋಡ, ಸಿ.ಎ.ಕುಂಬಾರ, ಅಖಂಡೇಶ ಬಡಿಗೇರ, ಅನಿತಾ ಜಾಧವ, ಚಂದ್ರಶೇಖರ ಮಾಳಿ, ಯಮನೂರಿ, ಯಲ್ಲಮ್ಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.