ವಿಜಯಪುರ:ನಿಡಗುಂದಿ ತಾಲ್ಲೂಕಿನ ಬೇನಾಳ ಮತ್ತು ಚಡಚಣ ತಾಲ್ಲೂಕಿನ ಉಮದಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜುಲೈ 8 ರಂದು ಬೇನಾಳ ಗ್ರಾಮದಲ್ಲಿ ಮನೆಯ ಹೊರಗಡೆ ಮಲಗಿದ್ದ ಶರಣಪ್ಪ ದಳವಾಯಿ ಎಂಬುವವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆನಾಗಪ್ಪ ಯಮನಪ್ಪ ಪೂಜಾರಿ ಎಂಬಾತನನ್ನು ಬಂಧಿಸಲಾಗಿದೆ ಎಂದರು.
ಈ ಆರೋಪಿಯನ್ನು ಅಥರ್ಗಾ ಗ್ರಾಮದಲ್ಲಿ ಬಂಧಿಸಲಾಗಿದೆ. ಕೊಲೆಗೀಡಾಗಿರುವ ವ್ಯಕ್ತಿಯು ಆರೋಪಿಯ ಮಗಳಿಗೆ ಪೀಡಿಸುತ್ತಿದ್ದ ಹಿನ್ನೆಲೆಯಲ್ಲಿ ಕುಪಿತಗೊಂಡ ಆರೋಪಿಯು ಕೊಲೆ ಮಾಡಿದ್ದಾನೆ ಎಂದು ತಿಳಿಸಿದರು.
ಜು.13 ರಂದುಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯ ಉಮದಿಯಲ್ಲಿ ನಡೆದ ಮಲ್ಲಣ್ಣ ನಂದಪ್ಪ ದ್ಯಾಪೂರ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದರು.
ವಿಕ್ರಮ ಕೈಲಾಸನಾಥ ಕಾಟಕರ, ಅಜೀತ್ ಅಲಿಯಾಸ್ ಅಜಯ ಶಿವದಾಸ ಶಿಂಧೆ ಹಾಗೂಬಾಲಾಪರಾಧಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.
ಮೂವರ ಬಂಧನ:
ವಿಜಯಪುರದ ಜಲನಗರ ಪೊಲೀಸ್ ಠಾಣೆ ಸೇರಿದಂತೆ ಏಳು ಕಡೆ ನಡೆದಿದ್ದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಲೋಕಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಸೇರಿದಂತೆ ಒಟ್ಟು ಏಳು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್ಪಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ ಅರಸಿದ್ಧಿ, ಡಿವೈಎಸ್ಪಿಗಳಾದ ಕೆ.ಸಿ. ಲಕ್ಷ್ಮೀನಾರಾಯಣ, ಶ್ರೀಧರ ದೊಡ್ಡಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.