ವಿಜಯಪುರ: ಜಿಲ್ಲೆಯಲ್ಲಿ ‘ಸಕಾಲ’ ಯೋಜನೆಯಡಿ ಅರ್ಜಿ ಸ್ವೀಕಾರ, ವಿಲೇವಾರಿ ಹಾಗೂ ಬಾಕಿ ಉಳಿದ ಅರ್ಜಿಗಳನ್ನು ಪ್ರಸಕ್ತ ಸಪ್ತಾಹದಲ್ಲಿ ವಿಲೇವಾರಿಗೆ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರದಿಂದ ಆರಂಭವಾಗಿರುವ ಸಕಾಲ ಸಪ್ತಾಹಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಕಾಲದಲ್ಲಿ ಅರ್ಜಿಗಳನ್ನು ಸ್ವೀಕರಿಸುವುದರೊಂದಿಗೆ ಬಾಕಿ ಇರುವ ಎಲ್ಲ ಅರ್ಜಿಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದ್ದು, ಶೀಘ್ರ ವಿಲೇವಾರಿಗೆ ಕ್ರಮಕೈಗೊಳ್ಳಬೇಕು ಎಂದರು.
ಪ್ರಥಮ ಹಂತವಾಗಿ ಕಂದಾಯ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ ಇಲಾಖೆ, ನಗರಾಭಿವೃದ್ಧಿ ಕೋಶ, ಅರಣ್ಯ ಇಲಾಖೆಗಳು ತಮ್ಮಲ್ಲಿರುವ ಸಕಾಲ ಅರ್ಜಿಗಳನ್ನು ಈ ಸಪ್ತಾಹದೊಳಗೆ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್, ಚುನಾವಣಾ ವಿಭಾಗದ ತಹಶೀಲ್ದಾರ್ ಶಾಂತಲಾ ಚಂದನ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಸಿದ್ಧರಾಮ ಮಾರಿಹಾಳ, ಡಿಯುಡಿಸಿ ಯೋಜನಾ ನಿರ್ದೇಶಕ ವಿಜಯಕುಮಾರ್ ಮೆಕ್ಕಳಕಿ ಇದ್ದರು.