ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ, ವಿಜಯಪುರ ಜಿಲ್ಲೆಯಲ್ಲಿ 2021 ಮತ್ತು 2022ರಲ್ಲಿ ಭೂಕಂಪನ ಉಂಟಾಗಿರುವ ಮಾಹಿತಿಗಳು ಲಭ್ಯ ಇವೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಹಯೋಗದಲ್ಲಿ ರಾಷ್ಟ್ರಮಟ್ಟದಪ್ರತಿಷ್ಠಿತ ಸಂಸ್ಥೆಗಳ ವೈಜ್ಞಾನಿಕ ಅಧಿಕಾರಿಗಳ ತಂಡ ಜಿಲ್ಲೆಯ ಭೂಕಂಪನ ಪ್ರದೇಶಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಭೂಕಂಪಗಳ ಬಗ್ಗೆ ಅರಿವು ಮೂಡಿಸಿದೆ. ಭೂಕಂಪನದಿಂದ ಉಂಟಾಗುವ ಆಪಾಯಗಳನ್ನು ಹೇಗೆ ತಗ್ಗಿಸಬಹುದು ಎಂಬುದರ ಕುರಿತು ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನು ಮಾಡಲಾಗಿದೆ. ಜೊತೆಗೆ ಈ ಭೂಕಂಪನದ ಕುರಿತು ಹೆಚ್ಚಿನ ಅಧ್ಯಯನ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.