ವಿಜಯಪುರ: ಹಾನಗಲ್ ಕುಮಾರ ಶಿವಯೋಗಿಗಳ 156ನೇ ಜಯಂತ್ಯುತ್ಸವವನ್ನು ಸೆ. 24 ರಿಂದ ಅ.4ರ ವರೆಗೆ ಬಸವನಬಾಗೇವಾಡಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗುಣದಾಳದ ವಿವೇಕಾನಂದ ದೇವರು ತಿಳಿಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿಯ ಶ್ರೀ ಬಸವೇಶ್ವರ ಇಂಟರ್ನ್ಯಾಶನಲ್ ಶಾಲೆ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಅವರು ಮಹಾಶಿವಯೋಗಿಗಳ ಕುರಿತು ಪ್ರವಚನ ನೀಡಲಿದ್ದಾರೆ ಎಂದು ತಿಳಿಸಿದರು.
ಸೆ. 24ರಂದು ಸಂಜೆ 6ಕ್ಕೆ ಶಿವಯೋಗಿಗಳವರ ಜಯಂತಿ ಕಾರ್ಯಕ್ರಮವನ್ನು ಬಸವನಬಾಗೇವಾಡಿ-ಬಿಳ್ಳೂರ ವಿರಕ್ತಮಠದ ಮುರುಘೇಂದ್ರ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸಲಾಗಿದೆ ಎಂದರು.
ಹುಬ್ಬಳ್ಳಿ ಮೂರುಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇಂಗಳೇಶ್ವರ ವಿರಕ್ತಮಠದ ಚನ್ನಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಸಬಿನಾಳದ ಸಿದ್ದರಾಮ ಸ್ವಾಮೀಜಿ, ಮನಗೂಳಿಯ ಡಾ. ಮಹಾಂತಲಿಂಗ ಶಿವಾಚಾರ್ಯರು, ಮಸೂತಿಯ ಪ್ರಭುಕುಮಾರ ಶಿವಾಚಾರ್ಯರು, ಮುತ್ತಗಿಯ ರುದ್ರಮುನಿ ಶಿವಾಚಾರ್ಯರು, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು, ಮನಗೂಳಿಯ ಅಭಿನವ ಸಂಗನಬಸವ ಶಿವಾಚಾರ್ಯರು, ಇಂಗಳೇಶ್ವರದ ಭೃಂಗೀಶ್ವರ ಶಿವಾಚಾರ್ಯರು, ಕರಭಂಟನಾಳದ ಶಿವಕುಮಾರ ಸ್ವಾಮೀಜಿ ಪಾಲ್ಗೊಳ್ಳುವರು ಎಂದರು.
ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸುವರು. ಶಾಸಕ ರಾಜುಗೌಡ ಪಾಟೀಲ, ಸಹಕಾರಿ ಮಹಾಮಂಡಳದ ನಿರ್ದೇಶಕ ಐ.ಸಿ. ಪಟ್ಟಣಶೆಟ್ಟಿ, ಕೂಡಲಸಂಗಮ ಅಭಿವೃದ್ದಿ ಪ್ರಾಧಿಕಾರದ ಆಯುಕ್ತ ಬಸಪ್ಪ ಪೂಜಾರಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಬೀಳಗಿಯ ಗುರುಪಾದೇಶ್ವರ ಶಿವಾಚಾರ್ಯ ಮಾತನಾಡಿ, ಈ ಅವಧಿಯಲ್ಲಿ 23 ಹಳ್ಳಿಗಳಿಗೆ ನಾನಾ ಮಠಾಧೀಶರು ಸಂಚರಿಸಿ, ಲಿಂಗ ಪೂಜೆ, ಭಸ್ಮಧಾರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಜನಮಾನಸಕ್ಕೆ ತಲುಪಿಸುವ ಕಾರ್ಯ ಮಾಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಸವನಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ತಡವಲಗಾ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರು, ಕೊಲ್ಹಾರ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಆಸಂಗಿ ಹಿರೇಮಠದ ವೀರಬಸವ ದೇವರು, ಯರನಾಳದ ಪ್ರಸಾದ ದೇವರು, ಹುಣಶ್ಯಾಳದ ಆನಂದ ದೇವರು, ತೆಲಂಗಾಣದ ವಿರುಪಾಕ್ಷ ದೇವರು, ಬೆಳ್ಳುಬ್ಬಿಯ ರೇಣುಕ ದೇವರು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ದತ್ತಾತ್ರೇಯ ಹೊಸಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.