ವಿಜಯಪುರ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟಿಕೆಟ್ ಅನ್ನು ಬಂಜಾರ ಸಮಾಜಕ್ಕೆ ನೀಡದೇ ಅನ್ಯಾಯ ಮಾಡಲಾಗಿದೆ ಎಂದು ಸಮಾಜದ ಮುಖಂಡ ಬಿ.ಬಿ. ಲಮಾಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮಾಜಕ್ಕೆ ಅನ್ಯಾಯ ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭಾ ಚುನಾವಣೆಗಳಲ್ಲಿ ಸರಿಯಾದ ಪಾಠ ಕಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಹಾಗೂ ರಾಜ್ಯದ ಕಾಂಗ್ರೆಸ್ ಮುಖಂಡರಿಗೆ ಸ್ವಲ್ಪವೂ ಕೂಡ ಬಂಜಾರ ಸಮಾಜದ ಮೇಲೆ ಕರುಣೆ ಇಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರು ನಮ್ಮ ಸಮಾಜದಿಂದ ನೂರಕ್ಕೆ ನೂರರಷ್ಟು ಮತ ಪಡೆದು, ಈಗ ಅಮಾಯಕ ಸಮಾಜವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ಕಳೆದ 3 ದಶಕಗಳಿಂದ ಸತತವಾಗಿ 4 ಬಾರಿ ಬಂಜಾರಾ ಸಮಾಜದ ಲೋಕಸಭೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಶಾಸಕರು ಸೇರಿ ಸೋಲಿಸಿದ್ದಾರೆ. ಈ ಬಾರಿ ಟಿಕೆಟ್ ವಿಷಯದಲ್ಲೂ ಮೋಸ ಮಾಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ದೂರಿದ್ದಾರೆ.