ವಿಜಯಪುರ: ಅರಣ್ಯ ಇಲಾಖೆಯ ವಿವಿಧ ಯೋಜನೆಗಳಡಿ ನಿರ್ಮಿಸಿರುವ ಭೂತನಾಳ ಸಸ್ಯ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯ್ತಿ ಅನುದಾನದಡಿ ವಿವಿಧ ಜಾತಿಯ ಹಾಗೂ ವಿವಿಧ ಅಳತೆಯ ಸಸಿಗಳನ್ನು ಬೆಳೆಸಿ, ನಿರ್ವಹಣೆ ಮಾಡುತ್ತಿರುವ 70 ಸಾವಿರ ಸಸಿಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.
2021-22ನೇ ಸಾಲಿನಲ್ಲಿ ಜಿಲ್ಲಾ ಪಂಚಾಯ್ತಿ ಅಭಿವೃದ್ಧಿ ಅನುದಾನದಡಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಪರಿಶೀಲಿಸಿ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ಬೆಳೆಸಿ, ಮಾದರಿ ನೆಡುತೋಪುಗಳನ್ನು ನಿರ್ಮಾಣ ಮಾಡಲು ಸೂಚಿಸಿದರು.
ಈಗಾಗಲೇ ಜಿಲ್ಲೆಯ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸ್ವ-ಸಹಾಯ ಸಂಘಗಳ ಮಹಿಳೆಯರಿಂದ ನರ್ಸರಿ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸ್ವ-ಸಹಾಯ ಸಂಘಗಳ ಸದಸ್ಯರನ್ನು ಸದರಿ ಸಸ್ಯಕ್ಷೇತ್ರಕ್ಕೆ ಭೇಟಿ ನೀಡಲು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಗೆ ಸೂಚಿಸಿದರು.
ಸಸ್ಯ ಕ್ಷೇತ್ರದ ಪಕ್ಕದ ಕೆರೆಗೆ ಹೊಂದಿಕೊಂಡಿರುವ ನಾಲಾಗಳಿಗೆ ಬಹುಕಮಾನುಗಳ ತಡೆಗೋಡೆ ನಿರ್ಮಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ವಿಜಯಪುರ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ವಿಜಯಪುರದ ಸಾಮಾಜಿಕ ಅರಣ್ಯ ವಲಯ ಅಧಿಕಾರಿ ಗಿರೀಶ್ ಹಲಕುಡೆ, ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಸಂತೋಷಕುಮಾರ ಅಜೂರ ಇದ್ದರು.