ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಜಾಥಾ

ಸಾಮಾಜಿಕ ಹೋರಾಟಗಾರರ ಎಸ್.ಆರ್. ಹಿರೇಮಠ
Last Updated 25 ಜನವರಿ 2022, 11:47 IST
ಅಕ್ಷರ ಗಾತ್ರ

ವಿಜಯಪುರ:ರಾಜ್ಯ ಸರ್ಕಾರ ಜಾರಿಗೆ ತಂದಿರುವಮೂರು ಕೃಷಿ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿಸಮಾನ ಮನಸ್ಕ ಸಂಘಟನೆಗಳೊಂದಿಗೆ ಜನಜಾಗೃತಿ ಜಾಥಾ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರರ ಎಸ್.ಆರ್. ಹಿರೇಮಠ ಒತ್ತಾಯಿಸಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನವಿರೋಧಿ ಕಾಯ್ದೆಗಳ ವಿರುದ್ಧ ಜನಾಂದೋಲನ ಮಹಾಮೈತ್ರಿ ಹಾಗೂ ಪ್ರಗತಿಪರ ಸಂಘಟನೆಗಳ ವೇದಿಕೆಯಿಂದ ಫೆಬ್ರುವರಿ ಕೊನೆಯ ವಾರದಲ್ಲಿ ಬೀದರ್‌ನ ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಗಳು ರೈತರ ಪಾಲಿಗೆ ಕರಾಳವಾಗಿವೆ. ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡುವ ಈ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸಮಾಜ ಸುಧಾರಕರ ಸ್ತಬ್ಧಚಿತ್ರಗಳನ್ನೊಳಗೊಂಡ ವಾಹನದಲ್ಲಿ ಜನ ಜಾಗೃತಿ ಜಾಥಾ ನಡೆಯಲಿದೆ. ಮಾರ್ಗದುದ್ದಕ್ಕೂ ಸ್ಥಳೀಯರ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬೆಂಗಳೂರು ತಲುಪಿ, ಧರಣಿ ನಡೆಸಲಾಗುವುದು. ನಮ್ಮ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದರೆ, ಮುಖ್ಯಮಂತ್ರಿ ನಿವಾಸದ ಎದುರು ಮೌನ ಪ್ರತಿಭಟನೆ ನಡೆಸಲಾಗುವುದು ಎಂದರು.

ಇಂದಿನ ಸರ್ಕಾರಗಳು ನಿರಂತರವಾಗಿ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಮತ್ತು ವ್ಯವಸ್ಥಿತವಾಗಿ ಭ್ರಷ್ಟಾಚಾರ ಮಾಡುತ್ತಿದ್ದಾರೆ. ಇವುಗಳ ವಿರುದ್ಧ ಪ್ರತಿ ಜಿಲ್ಲೆಯಲ್ಲಿ ನಾಗರಿಕರ ವೇದಿಕೆಗಳನ್ನು ಮಾಡಿಕೊಂಡು ಪ್ರತಿಭಟನೆ ಮತ್ತು ಚಳವಳಿಗಳನ್ನು ಬಲಿಷ್ಠಗೊಳಿಸಬೇಕು ಎಂದು ಹೇಳಿದರು.

ಪ್ರಗತಿಪರ ಸಂಘಟನೆಯ ಮುಖಂಡರಾದ ಶ್ರೀನಾಥ ಪೂಜಾರಿ, ಅಕ್ರಂ ಮಾಶ್ಯಾಳಕರ್, ಸದಾನಂದ ಮೋದಿ, ಸಿದ್ಧಲಿಂಗ ಬಾಗೇವಾಡಿ, ಇರ್ಫಾನ್ ಶೇಖ್, ನಿರ್ಮಲಾ ಹೊಸಮನಿ, ರಿಜ್ವಾನ್, ಅಕ್ಷಯಕುಮಾರ, ಅಬೂಬಕರ್, ಅಬ್ದುಲ್ ಹಮೀದ್ ಇನಾಂಮದಾರ ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT