ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಮಂಡಿಸಿರುವ ಬಜೆಟ್ನಲ್ಲಿ ಜಿಲ್ಲೆಗೆ ಹೊಸ ಯೋಜನೆಗಳ ಕೊಡುಗೆ ಜೊತೆ, ಜೊತೆಗೆ ಈ ಹಿಂದಿನ ಬಜೆಟ್ನಲ್ಲಿ ಘೋಷಣೆ ಮಾಡಿರುವ ಯೋಜನೆಗಳನ್ನು ಮರು ಘೋಷಣೆ ಮಾಡಿದ್ದಾರೆ.
ಬಸವಣ್ಣನವರ ಜನ್ಮಸ್ಥಳದ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಶಿವಯೋಗಿ ಸಿದ್ಧರಾಮೇಶ್ವರ ಅವರ ಬದುಕು-ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡುವುದಾಗಿ ಬಜೆಟ್ನಲ್ಲಿ ಹೊಸದಾಗಿ ಘೋಷಣೆ ಮಾಡಲಾಗಿದೆ.
ವಿಜಯಪುರ ಸೈಕ್ಲಿಂಗ್ ಅಕಾಡೆಮಿ ಸ್ಥಾಪನೆ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪನೆ, ಬಸವನಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ವಿಜಯಪುರದಲ್ಲಿ ಕರೇಜ್ ಎಂದೇ ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗ ಪುನಶ್ಚೇತನಗೊಳಿಸಲಾಗುವುದು ಎಂದು ಘೋಷಿಸಲಾಗಿದೆ. ಆದರೆ, ಪ್ರವಾಸಿತಾಣಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳು ಘೋಷಣೆಯಾಗಿಲ್ಲದಿರುವುದು ನಿರಾಶೆ ಮೂಡಿಸಿದೆ.
ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರೀಕ್ಷೆಯಲ್ಲಿದ್ದ ಜಿಲ್ಲೆಗೆ, ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ ಅನ್ನು ವಿಜಯಪುರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.
ವಿಜಯಪುರದ ಇಟ್ಟಂಗಿಹಾಳದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಫುಡ್ ಪಾರ್ಕ್ ಸ್ಥಾಪನೆ, ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ ಈ ಹಿಂದಿನ ಬಜೆಟ್ನಲ್ಲಿ ಘೋಷಣೆಯಾಗಿದ್ದು, ಇದುವರೆಗೂ ಅನುಷ್ಠಾನವಾಗದೇ ನನೆಗುದಿಗೆ ಬಿದ್ದಿರುವುದನ್ನೇ ಮರಳಿ ಘೋಷಣೆ ಮಾಡಲಾಗಿದೆ.
ವಿಜಯಪುರದಲ್ಲಿ ₹350 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾಚರಣೆ ಪ್ರಾರಂಭವಾಗಲಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಗೆ ₹ 94 ಕೋಟಿ ಬಿಡುಗಡೆ ಮಾಡಿದೆ ಎಂದು ಹಳೆಯದನ್ನೇ ಹೇಳಿದ್ದಾರೆ.
ನೀರಾವರಿ, ಕೈಗಾರಿಕಾ ಜಿಲ್ಲೆಗೆ ಸಿಗದ ಆದ್ಯತೆ ಹಲವು ಯೋಜನೆ ಮರು ಘೋಷಣೆ ಜಿಲ್ಲೆಯ ಪ್ರವಾಸೋದ್ಯ ನಿರ್ಲಕ್ಷ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.