ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌ | ವಿಜಯಪುರ: ಬಸವನಾಡಿಗೆ ಪ್ರಾಧಿಕಾರ, ಸೈಕ್ಲಿಂಗ್‌ ಅಕಾಡೆಮಿ ಕೊಡುಗೆ

ಹಳೇ ಯೋಜನೆಗಳಿಗೆ ಬಜೆಟ್‌ನಲ್ಲಿ ಮರು ಘೋಷಣೆ ಭಾಗ್ಯ!
Published 17 ಫೆಬ್ರುವರಿ 2024, 8:24 IST
Last Updated 17 ಫೆಬ್ರುವರಿ 2024, 8:24 IST
ಅಕ್ಷರ ಗಾತ್ರ

ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಮಂಡಿಸಿರುವ ಬಜೆಟ್‌ನಲ್ಲಿ ಜಿಲ್ಲೆಗೆ ಹೊಸ ಯೋಜನೆಗಳ ಕೊಡುಗೆ ಜೊತೆ, ಜೊತೆಗೆ ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಯೋಜನೆಗಳನ್ನು ಮರು ಘೋಷಣೆ ಮಾಡಿದ್ದಾರೆ.

ಬಸವಣ್ಣನವರ ಜನ್ಮಸ್ಥಳದ ಅಭಿವೃದ್ಧಿಗೆ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ, ಶಿವಯೋಗಿ ಸಿದ್ಧರಾಮೇಶ್ವರ ಅವರ ಬದುಕು-ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡುವುದಾಗಿ ಬಜೆಟ್‌ನಲ್ಲಿ ಹೊಸದಾಗಿ ಘೋಷಣೆ ಮಾಡಲಾಗಿದೆ. 

ವಿಜಯಪುರ ಸೈಕ್ಲಿಂಗ್‌ ಅಕಾಡೆಮಿ ಸ್ಥಾಪನೆ, ಆಲಮಟ್ಟಿಯಲ್ಲಿ ಒಳನಾಡು ಮೀನುಗಾರಿಕೆ ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪನೆ, ಬಸವನಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಲಾಗಿದೆ.

ವಿಜಯಪುರದಲ್ಲಿ ಕರೇಜ್‌ ಎಂದೇ ಪ್ರಸಿದ್ಧವಾಗಿರುವ ಪುರಾತನ ನೀರು ಸರಬರಾಜು ವ್ಯವಸ್ಥೆಯನ್ನು ನುರಿತ ಸಂಸ್ಥೆಗಳ ತಾಂತ್ರಿಕ ನೆರವಿನೊಂದಿಗ ಪುನಶ್ಚೇತನಗೊಳಿಸಲಾಗುವುದು ಎಂದು ಘೋಷಿಸಲಾಗಿದೆ. ಆದರೆ, ಪ್ರವಾಸಿತಾಣಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳು ಘೋಷಣೆಯಾಗಿಲ್ಲದಿರುವುದು ನಿರಾಶೆ ಮೂಡಿಸಿದೆ.

ಸರ್ಕಾರಿ ವೈದ್ಯಕೀಯ ಕಾಲೇಜಿನ ನಿರೀಕ್ಷೆಯಲ್ಲಿದ್ದ ಜಿಲ್ಲೆಗೆ, ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ ಅನ್ನು ವಿಜಯಪುರದಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.  

ಮರು ಘೋಷಣೆ

ವಿಜಯಪುರದ ಇಟ್ಟಂಗಿಹಾಳದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಫುಡ್‌ ಪಾರ್ಕ್‌ ಸ್ಥಾಪನೆ, ಆಲಮೇಲದಲ್ಲಿ ತೋಟಗಾರಿಕೆ ಕಾಲೇಜು ಸ್ಥಾಪನೆ ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆಯಾಗಿದ್ದು, ಇದುವರೆಗೂ ಅನುಷ್ಠಾನವಾಗದೇ ನನೆಗುದಿಗೆ ಬಿದ್ದಿರುವುದನ್ನೇ ಮರಳಿ ಘೋಷಣೆ ಮಾಡಲಾಗಿದೆ.

ವಿಜಯಪುರದಲ್ಲಿ ₹350 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಯು ಮುಕ್ತಾಯ ಹಂತದಲ್ಲಿದ್ದು, ಶೀಘ್ರವೇ ಕಾರ್ಯಾಚರಣೆ ಪ್ರಾರಂಭವಾಗಲಿದೆ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಯೋಜನೆಗೆ ₹ 94 ಕೋಟಿ  ಬಿಡುಗಡೆ ಮಾಡಿದೆ ಎಂದು ಹಳೆಯದನ್ನೇ ಹೇಳಿದ್ದಾರೆ. 

ನೀರಾವರಿ, ಕೈಗಾರಿಕಾ ಜಿಲ್ಲೆಗೆ ಸಿಗದ ಆದ್ಯತೆ ಹಲವು ಯೋಜನೆ ಮರು ಘೋಷಣೆ  ಜಿಲ್ಲೆಯ ಪ್ರವಾಸೋದ್ಯ ನಿರ್ಲಕ್ಷ್ಯ
ಚುನಾವಣಾ ಭರವಸೆಗೆ ಸಿಗದ ಆದ್ಯತೆ
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಯೋಜನೆಯಡಿಯ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಹಾಗೂ ಇದರಡಿ ಭೂಸ್ವಾಧೀನ ಮತ್ತು ಪುನರ್ ವಸತಿ ಹಾಗೂ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು. ಕೃಷ್ಣಾ ನ್ಯಾಯಾಧಿಕರಣ-2ರ ಅಂತಿಮ ತೀರ್ಪಿನ ಬಾಕಿಯಿರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದರೊಂದಿಗೆ ಅಗತ್ಯವಿರುವ ಕಾನೂನಾತ್ಮಕ ಕ್ರಮಗಳನ್ನು ಮುಂದುವರೆಸಲಾಗುವುದು ಎಂದು ಹೇಳಲಾಗಿದ್ದು ಇದರಲ್ಲೂ ಹೊಸತನವೇನಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಪ್ರತಿ ವರ್ಷ ₹50 ಸಾವಿರ ಕೋಟಿ ನೀಡುತ್ತೇವೆ ಎಂಬ ಚುನಾವಣೆ ಘೋಷಣೆಗೆ ಆದ್ಯತೆ ಸಿಕ್ಕಿಲ್ಲ. ಕೃಷ್ಣಾ ಭಾಗ್ಯ ಜಲ ನಿಗಮದಡಿ ಹೊರ್ತಿ-ರೇವಣಸಿದ್ದೇಶ್ವರ ಚಿಮ್ಮಲಗಿ ಮುಳವಾಡ ಏತ ನೀರಾವರಿ ಯೋಜನೆ  ಅನುಷ್ಠಾನಗೊಳಿಸಲಾಗುವುದು ಎಂದು ಹೇಳಲಾಗಿದ್ದು ಜಿಲ್ಲೆಗೆ ಇದು ಸಹ ಹೊಸದೇನಲ್ಲ. ಈ ಹಿಂದಿನ ಬಜೆಟ್‌ನಲ್ಲಿ ಘೋಷಣೆಯಾಗಿ ಅನುಷ್ಠಾನದ ಹಂತದಲ್ಲಿರುವ ಯೋಜನೆಗಳಾಗಿವೆ. ಈಗಾಗಲೇ ಅನುಮೋದನೆಗೊಂಡಿರುವ ವಿಜಯಪುರದಲ್ಲಿ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಕಾರ್ಯಾರಂಭ ಮಾಡಲು ಆದ್ಯತೆ ನೀಡಲಾಗುವುದು ಎಂದು ಪುನರುಚ್ಚರಿಸಲಾಗಿದೆ. ನೀರಾವರಿ ಕೈಗಾರಿಕಾ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಜಿಲ್ಲೆಗೆ ಆದ್ಯತೆ ಸಿಕ್ಕಿಲ್ಲ. ಜಿಲ್ಲೆಯವರೇ ಆದ ಎಂ.ಬಿ.ಪಾಟೀಲ ಅವರು ಬೃಹತ್‌ ಕೈಗಾರಿಕಾ ಸಚಿವರಾಗಿರುವುದರಿಂದ ಬಜೆಟ್‌ನಲ್ಲಿ ವಿಶೇಷ ಆದ್ಯತೆ ಸಿಗಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ವಿಜಯಪುರ ಮಹಾನಗರ ಪಾಲಿಕೆ ಲಿಂಬೆ ಅಭಿವೃದ್ಧಿ ಪ್ರಾಧಿಕಾರ ಅಕ್ಕಮಹಾದೇವಿ ಮಹಿಳಾ ವಿವಿ ದ್ರಾಕ್ಷಿ ಮಂಡಳಿಗೆ ವಿಶೇಷ ಅನುದಾನ ಯೋಜನೆಗಳ ಘೋಷಣೆಯಾಗಬಹುದು ಎಂಬ ಭರವಸೆ ಈಡೇರಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT