ವಿಜಯಪುರ: ಜೆಡಿಎಸ್ ಉದ್ದೇಶ ಏನೇ ಇದ್ದರೂ ಬುದ್ಧಿವಂತ ಮತದಾರರು ಅವರಿಗೆ ಮತ ಹಾಕುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸಿಂದಗಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ಚುನಾವಣೆ ಕಾಂಗ್ರೆಸ್ಗೆ ಬಯಸದೆ ಬಂದ ಭಾಗ್ಯ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿವೆ. ಜನರಿಗೆ ಕಣ್ಣಿರಲ್ಲಿ ಕೈತೊಳೆಯುವಂತಹ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಬೇಸತ್ತಿರುವ ಮತದಾರರು ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾತನಾಡಿ, ‘ಈ ಉಪ ಚುನಾವಣೆ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ತಕ್ಕ ಪಾಠ ಕಲಿಸಲು ಬಂದಿದೆ. ಸಿಂದಗಿ ಮತ್ತು ಹಾನಗಲ್ ಎರಡು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ 25 ಸಾವಿರ ಮತಗಳ ಅಂತರದಿಂದ ಗೆಲ್ಲಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿಂದಗಿ ಕ್ಷೇತ್ರದಲ್ಲಿ ಜನ ಸಾಗರ ನೋಡಿದರೆ ಏನನ್ನೂ ಹೇಳುವ ಅವಶ್ಯಕತೆ ಇಲ್ಲ ಅನ್ನಿಸುತ್ತದೆ. ಸಮಾಜದ ಎಲ್ಲ ವರ್ಗದವರು ಕಾಂಗ್ರೆಸ್ ಅಭ್ಯರ್ಥಿಯನ್ನು ಒಪ್ಪಿದ್ದಾರೆ ಎಂದು ಹೇಳಿದರು.
ದಿ.ಎಂ.ಸಿ.ಮನಗೂಳಿ ಅವರು ನನ್ನ ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಪುತ್ರ ಅಶೋಕನನ್ನು ಕಾಂಗ್ರೆಸ್ಗೆ ಸೇರಿಸಿಕೊಂಡು ಬೆಳೆಸಲು ಮನವಿ ಮಾಡಿದ್ದರು. ಅವರ ಆಶಯದಂತೆ ಅಶೋಕ್ ಅವರನ್ನು ಸೇರ್ಪಡೆ ಮಾಡಿಕೊಂಡು ಟಿಕೆಟ್ ನೀಡಿದ್ದೇವೆ. ಅವರ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಶಾಸಕರಾದ ಎಂ.ಬಿ.ಪಾಟೀಲ, ಯಶವಂತರಾಯಗೌಡ ಪಾಟೀಲ, ಶಿವಾನಂದ ಪಾಟೀಲ ಮತ್ತಿತರರು ಇದ್ದರು.