ವಿಜಯಪುರ: ‘ಜ್ಞಾನ ಸಂಪಾದನೆಯ ಮೂಲಕ ದೇಶದ ಘನತೆಯನ್ನು ಎತ್ತಿ ಹಿಡಿಯಬೇಕು. ದೇಶದ ಸಮಗ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿನಿಯೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ಹೇಳಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ, ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಮಹಿಳೆಯರಿಗಾಗಿ ಏಳು ದಿನಗಳ ರಾಷ್ಟ್ರೀಯ ಭಾವೈಕ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಆಶಯದಂತೆ ನಮ್ಮ ದೇಶದಲ್ಲಿ ಸಾಮಾಜಿಕ ಸಮಾನತೆ ತರಲು ಪ್ರತಿಯೊಬ್ಬರು ತಮ್ಮ ತಮ್ಮ ನೆಲೆಯಲ್ಲಿ ಕೆಲಸ ಮಾಡಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೇಳಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಡಾ.ಸದಾಶಿವ ಮರ್ಜಿ ಮಾತನಾಡಿ, ನಮ್ಮ ಭಾವನೆಗಳನ್ನು, ತತ್ವ, ಆದರ್ಶ, ವಿಚಾರವನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಭಾಷೆಯು ಪ್ರಮುಖ ಮಾಧ್ಯಮವಾಗಿ ಕಾರ್ಯನಿರ್ವಹಿಸುತ್ತದೆ. ಹೀಗಾಗಿ, ರಾಷ್ಟ್ರೀಯ ಭಾವೈಕ್ಯವನ್ನು ಮೂಡಿಸುವಲ್ಲಿ ಭಾಷೆಯು ಅತ್ಯಂತ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ ಎಂದರು.
ಮಹಿಳಾ ವಿವಿಯ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಂವಿಧಾನದ ಆಶಯಗಳನ್ನು ಅರಿತುಕೊಳ್ಳಬೇಕಾಗಿದೆ. ಅಂದಾಗ ಮಾತ್ರ ಯುವ ಪೀಳಿಗೆ ಸಮಸ್ಯೆಗಳನ್ನು, ಸವಾಲುಗಳನ್ನು ಎದುರಿಸಿ ಸಾಧಕರಾಗಿ ಹೊರಹೊಮ್ಮುತ್ತಾರೆ ಎಂದರು.
ಎನ್.ಎಸ್.ಎಸ್. ಶಿಬಿರಗಳನ್ನು ನಡೆಸುವುರಿಂದ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಹಾಗೂ ಸಾಮಾಜಿಕ ಮತ್ತು ಮಾನವ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಹಾಯಕವಾಗುತ್ತದೆ. ಅದರೊಂದಿಗೆ ವಿದ್ಯಾರ್ಥಿಗಳ ವೈಯುಕ್ತಿಕ ಸಾಮಾರ್ಥ್ಯ, ಸಾಂಸ್ಥಿಕ ಸಾಮಾರ್ಥ್ಯ ಮತ್ತು ಸಮುದಾಯ ಸಾಮಾರ್ಥ್ಯವನ್ನು ಅಭಿವೃದ್ಧಿ ಪಡಿಸಿಕೊಳ್ಳಲು ಉಪಯುಕ್ತವಾಗಿದೆ ಎಂದರು.
ಡಾ.ಸದಾಶಿವ ಮರ್ಜಿ ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಪ್ರದರ್ಶಕ ಕಲೆಗಳ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆಯನ್ನು ಹಾಡಿದರು. ಶಿಬಿರಾರ್ಥಿಗಳು ಎನ್ಎಸ್ಎಸ್. ಗೀತೆಯನ್ನು ಹಾಡಿದರು. ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜಕ ಪ್ರೊ.ನಾಮದೇವಗೌಡ, ರಾಯಚೂರು ಕೃಷಿ ಕಾಲೀಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ.ಮಲ್ಲಿಕಾರ್ಜುನ ಹೊಳೆಪ್ಪ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಜೆನಿಫರ್ ಸೌಲಮ್, ಅಕ್ಷಯ ಯಾರ್ದಿ,ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಕಲಾವತಿ ಕಾಂಬ್ಳೆ, ಎನ್ಎಸ್ಎಸ್ ನೋಡಲ್ ಅಧಿಕಾರಿ ಡಾ ಮಲ್ಲಿಕಾರ್ಜುನ ಪೆಂಟದ್ ಉಪಸ್ಥಿತರಿದ್ದರು.
* ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳೊಂದಿಗೆ ರಾಷ್ಟ್ರೀಯ ಭಾವೈಕ್ಯ, ಏಕತೆ, ಸಮಾನತೆ, ಸ್ವಾತಂತ್ರ್ಯದ ಕುರಿತು ಅರಿವು ಮೂಡಿಸುತ್ತದೆ.
-ಪಿ.ಸುನೀಲಕುಮಾರ್, ಜಿಲ್ಲಾಧಿಕಾರಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.