ಬಸವನಬಾಗೇವಾಡಿ: ‘ಭಗವಂತನಲ್ಲಿ ಅಚಲವಾದ ಭಕ್ತಿಯಿಟ್ಟು ನಿಷ್ಠೆ, ಪ್ರಾಮಾಣಿಕತೆಯಿಂದ ಜೀವನ ನಡೆಸಬೇಕು’ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ತೆಲಗಿ ರಸ್ತೆಯಲ್ಲಿನ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರೆ ಅಂಗವಾಗಿ ಈಚೆಗೆ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಮಹಾತ್ಮೆ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
‘ಈ ದೇವಸ್ಥಾನವು ಸರ್ಕಾರದ ಯಾವುದೇ ಅನುದಾನ ಪಡೆಯದೇ ಭಕ್ತರೇ ನಿರ್ಮಾಣ ಮಾಡಿರುವುದು ಶ್ಲಾಘನೀಯ. ಮುಂಬರುವ ದಿನಗಳಲ್ಲಿ ಈ ದೇವಸ್ಥಾನಕ್ಕೆ ಬರಲು ಸುಸಜ್ಜಿತ ರಸ್ತೆ, ಬೀದಿದೀಪ, ದೇವಸ್ಥಾನದ ಪ್ರಾಂಗಣ ಉತ್ತಮವಾಗಿ ನಿರ್ಮಾಣ ಮಾಡಲು ಸಹಕಾರ ನೀಡುತ್ತೇನೆ’ ಎಂದು ಭರವಸೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ಸಿದ್ಧಲಿಂಗ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ, ವಿಪಿಕೆಎಸ್ ಬ್ಯಾಂಕ್ ಅಧ್ಯಕ್ಷ ಸಂಗನಗೌಡ ಚಿಕ್ಕೊಂಡ ಮಾತನಾಡಿದರು.
ಪುರಸಭೆ ಸದಸ್ಯ ನೀಲು ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಜಾತ್ರಾ ಕಮಿಟಿ ಅಧ್ಯಕ್ಷ ಶರಣು ಮನಗೂಳಿ, ಮುಖಂಡರಾದ ಶ್ರೀಶೈಲ ಕೂಡಗಿ, ಪರಶುರಾಮ ಅಡಗಿಮನಿ, ವಿಠ್ಠಲ ಮಾಲಗಾರ ಇದ್ದರು.