ವಿಜಯಪುರ: ವಿಜಯಪುರ–ಬಾಗಲಕೋಟೆ ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಲು ಚರ್ಚೆ ನಡೆದಿದ್ದು, ಒಂದೆರಡು ದಿನದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದುರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದರು.
ನಗರದ ಸಾಯಿವಿಹಾರ ಮಂಗಲ ಕಾರ್ಯಾಲಯದಲ್ಲಿ ಬಿಜೆಪಿ ಜನ ಸ್ವರಾಜ ಸಮಾವೇಶದ ಪೂರ್ವ ಭಾವಿ ಸಭೆಗೂ ಮುನ್ನಾ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಟ್ ಕಾಯಿನ್ ಪ್ರಕರಣ ಹೊಸದೇನಲ್ಲ, ಸಿದ್ದರಾಮಯ್ಯ ಆಡಳಿತದ ವೇಳೆಯಲ್ಲೂ ಬಿಟ್ ಕಾಯಿನ್ ಪ್ರಕರಣ ಇತ್ತು. ಆಗ ಸಿದ್ದರಾಮಯ್ಯನವರು ಏಕೆ ತನಿಖೆ ಮಾಡಿಸಲಿಲ್ಲ. ಕಾಂಗ್ರೆಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ, ಏನಾದ್ರೂ ಒಂದು ಹೊಸ ವಿಚಾರ ಹುಡುಕುತ್ತಿದ್ದಾರೆ ಎಂದರು.
ಜನ ಸ್ವರಾಜ್ಯ ಸಮಾವೇಶ:ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನ.18 ರಿಂದ 23 ರವರೆಗೆ ಪ್ರತಿ ಜಿಲ್ಲೆಯಲ್ಲಿ ಜನ ಸ್ವರಾಜ್ಯ ಸಮಾವೇಶ ನಡೆಸುವ ಮೂಲಕಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲಾಗುವುದು ಎಂದರು.
ಸಭೆಯಲ್ಲಿ ಮಾತನಾಡಿದಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ನ.20 ರಂದು ಮಧ್ಯಾಹ್ನ 3ಕ್ಕೆ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಜನ ಸ್ವರಾಜ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡಲದ ಎಲ್ಲ ಅಧ್ಯಕ್ಷರು, ಜಿಲ್ಲೆಯ ಪದಾಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಗೆಲವು ಸಾಧಿಸಬೇಕಾಗಿದೆ. ಯಾರು ಅಭ್ಯರ್ಥಿ ಆಗುತ್ತಾರೆ ಎನ್ನುವುದು ಮುಖ್ಯವಲ್ಲ. ನಾನೇ ಅಭ್ಯರ್ಥಿ ಎಂದು ತಿಳಿದುಕೊಂಡು ಕೆಲಸ ಮಾಡಬೇಕು. ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದರು
ಜನ ಸ್ವರಾಜ್ಯ ಸಮಾವೇಶ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮಲು, ಜಿಲ್ಲಾ ಉಸ್ತುವಾರಿ ಸಚಿವ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಣಗಿ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದು ಹೇಳಿದರು.
ರಾಜ್ಯ ಕಾರ್ಯದರ್ಶಿ ಎನ್.ರಮೇಶ ಮಾತನಾಡಿದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಶಾಸಕ ಸೋಮನೌಡ ಪಾಟೀಲ ಸಾಸನೂರ, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಓಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗುರ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೋಟ, ದಯಾಸಾಗರ ಪಾಟೀಲ, ಗೂಳಪ್ಪ ಶೆಟಗಾರ, ಮಲ್ಲಮ್ಮ ಜೋಗುರ, ಭೀಮಾಶಂಕರ ಹದನೂರ, ಪ್ರಭುಗೌಡ ದೇಸಾಯಿ, ಗುರುಲಿಂಗಪ್ಪ ಅಂಗಡಿ, ವಿಜಯ ಜೋಶಿ, ಗೋಪಾಲ ಘಟಕಾಂಬಳೆ, ಶಿಲ್ಪಾ ಕುದರಗೊಂಡ, ಬಸು ಹೂಗಾರ, ಮಳುಗೌಡ ಪಾಟೀಲ, ಈಶ್ವರ ಶಿವೂರ, ವಿಠ್ಠಲ ಕಿರಸೂರ, ಮಲ್ಲಿಕಾರ್ಜುನ ಕಿವುಡೆ, ಪರಶುರಾಮ ಪವಾರ, ರಾಮು ಅವಟಿ, ಶಂಕರಗೌಡ ಪಾಟೀಲ, ಬಸವರಾಜ ಬೈಚಬಾಳ, ಕೃಷ್ಣಾ ಗುನ್ಹಾಳಕರ, ಶರಣ ಬಸು ಕುಂಬಾರ, ಪಿಂಟು ಕುಂಬಾರ, ರಾಜಕುಮಾರ ಸಗಾಯಿ, ರಮೇಶ ಮಸಬಿನಾಳ, ಸುರೇಶ ಬಿರಾದಾರ, ಗೀತಾ ಕುಗನೂರಇದ್ದರು.
***
ಸಿದ್ದರಾಮಯ್ಯ ಅವರದು ಹಿಟ್ ಆಂಡ್ ರನ್ ಕೆಲಸ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ವ್ರತಾ ಆರೋಪದ ಬದಲು ದಾಖಲೆಗಳಿದ್ದರೆ ಬಹಿರಂಗಗೊಳಿಸಲಿ. ಪಾರದರ್ಶಕವಾಗಿ ತನಿಖೆ ನಡೆಸಲು ಸರ್ಕಾರ ಬದ್ಧವಿದೆ.
-ಎನ್. ರವಿಕುಮಾರ್,ವಿಧಾನ ಪರಿಷತ್ ಸದಸ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.