ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ: ಜಿಲ್ಲಾಧಿಕಾರಿ

Last Updated 20 ಜನವರಿ 2022, 17:04 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚು ಕಂಡುಬರುತ್ತಿರುವುದರಿಂದ ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಹಾಗೂ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ಸಭೆ ನಡೆಸಿದ ಅವರು, ಅಧಿಕಾರಿಗಳು ತಮ್ಮ ನಿತ್ಯದ ಕಚೇರಿ ಕೆಲಸ ಕಾರ್ಯಗಳೊಂದಿಗೆ ಕೋವಿಡ್ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಈ ಕಾರ್ಯಕ್ಕೆ ನೇಮಿಸಲಾದ ಅಧಿಕಾರಿಗಳು ಸೋಂಕಿತರ ಹಾಗೂ ಶಂಕಿತರ ಸಮರ್ಪಕ ಅಗತ್ಯ ಮಾಹಿತಿ ಕ್ರೂಢೀಕರಣ ಸೇರಿದಂತೆ ಅದನ್ನು ಕೋವಿಡ್ ಪೋರ್ಟಲ್, ಆ್ಯಪ್ ಹಾಗೂ ಸರ್ಕಾರದ ನೂತನ ತಂತ್ರಾಂಶದಲ್ಲಿ ಸಮರ್ಪಕವಾಗಿ ದಾಖಲಿಸುವ ಕುರಿತು ಕೂಡಲೇ ಅವಶ್ಯಕ ಕ್ರಮಕೈಗೊಳ್ಳಬೇಕು ಎಂದರು.

ಕೋವಿಡ್ ನಿಯಂತ್ರಣಕ್ಕೆ ನೇಮಿಸಲಾದ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಲಸಿಕಾಕರಣ ಕಾರ್ಯದಲ್ಲಿ ತೋರಿದ ಬದ್ಧತೆಯನ್ನು ಇಲ್ಲಿಯೂ ತೋರುವ ಅವಶ್ಯಕತೆಯಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಬೇಜವಾಬ್ದಾರಿ ವಹಿಸಬಾರದು ಎಂದು ಸೂಚನೆ ನೀಡಿದರು.

ತಳಮಟ್ಟದಲ್ಲಿ ಕಾರ್ಯನಿರ್ವಹಿಸುವ ಸ್ವ್ಯಾಬ್ ಕಲೆಕ್ಟಿಂಗ್ ಟೆಕ್ನಿಷಿಯನ್‍ ಅವರ ಪಾತ್ರವೂ ಇದರಲ್ಲಿ ಬಹಳ ಪ್ರಮುಖವಾಗಿದ್ದು, ಅವರು ಸೋಂಕಿತರ ಹಾಗೂ ಶಂಕಿತರ ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಸಮರ್ಪಕವಾಗಿ ಒದಗಿಸುವಂತೆ ನೋಡಿಕೊಳ್ಳಬೇಕು ಎಂದರು.

ಕಾಂಟಾಕ್ಟ್ ಟ್ರೇಸಿಂಗ್ ಮತ್ತು ಕ್ವಾರಂಟೈನ್ ವಾಚ್ ಆ್ಯಪ್ ನಿರ್ವಹಣೆಯ ವಿಷಯದಲ್ಲಿ ಅಧಿಕಾರಿಗಳು ಬಹಳ ಜಾಗರೂಕರಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕಾಂಟಾಕ್ಟ್ ಟ್ರೇಸಿಂಗ್ ಆ್ಯಪ್ ಕುರಿತು ಬಿ.ಎಲ್.ಒಗಳು ಅತ್ಯಂತ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಕುರಿತು ಹೆಚ್ಚಿನ ಗಮನ ಹರಿಸಬೇಕು. ಕ್ವಾರಂಟೈನ್ ವಾಚ್ ಆ್ಯಪ್ ಬಗ್ಗೆ ಪಿಡಿಓ, ಬಿಲ್ ಕಲೆಕ್ಟರ್ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಪರಿಣಾಮಕಾರಿ ಕಾರ್ಯನಿರ್ವಹಿಸಬೇಕು. ಇದಕ್ಕೆ ತಪ್ಪಿದ್ದಲ್ಲಿ ಕಟ್ಟುನಿಟ್ಟಿನ ಕ್ರಮಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಕ್ವಾರಂಟೈನ್‍ನಲ್ಲಿರುವ ರೋಗಿಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವ ಜೊತೆಗೆ ಅವರಿಗೆ ಕಾಲಕಾಲಕ್ಕೆ ಸರಿಯಾದ ವೈದ್ಯಕೀಯ ಚಿಕಿತ್ಸೆ ಒದಗಿಸಿ, ಅವರ ಸಂಪರ್ಕದಲ್ಲಿರುವ ವ್ಯಕ್ತಿಗಳ ಬಗ್ಗೆಯೂ ನಿಗಾವಹಿಸಿ, ಅವರಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದರೆ ಕೂಡಲೇ ಅಗತ್ಯ ಕ್ರಮವಹಿಸಬೇಕು ಎಂದರು.

ಕಾಂಟಾಕ್ಟ್ ಟ್ರೇಸಿಂಗ್ ಬಗ್ಗೆ ಅಧಿಕಾರಿಗಳು ಇನ್ನೂ ಹೆಚ್ಚಿನ ಗಮನ ವಹಿಸಿ, ಆ್ಯಪ್ ಬಳಕೆಯಲ್ಲೂ ಅನಗತ್ಯ ಗೊಂದಲಕ್ಕೊಳಗಾಗಬಾರದು. ಈ ವಿಷಯದಲ್ಲಿ ಅಗತ್ಯವಿದ್ದರೆ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ಹಾಗೂ ತರಬೇತಿ ಒದಗಿಸಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ ಮಾತನಾಡಿ, ನಗರ ಪ್ರದೇಶದಲ್ಲಿಕಾರ್ಯ ಪರಿಣಾಮಕಾರಿಯಾಗಿ ಕಂಡುಬರುತ್ತಿದ್ದು, ಗ್ರಾಮೀಣ ಮಟ್ಟದಲ್ಲೂ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಧಿಕಾರಿಗಳು ಕಾರ್ಯೋನ್ಮುರಾಗಬೇಕು ಎಂದರು.

ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಯರಗಲ್‌ ಸೇರಿದಂತೆ ತಹಶೀಲ್ದಾರ್‌ ಹಾಗೂ ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT