ವಿಜಯಪುರ: ‘ರಾಜ್ಯ ಸರ್ಕಾರಕ್ಕೆ ಅಭಿವೃದ್ಧಿ ಕೆಲಸ ಮಾಡಲು ಹಣ ಇಲ್ಲ ಎಂಬುದು ಅಪ್ಪಟ ಸುಳ್ಳು. ಜನರನ್ನು ತಪ್ಪು ಹಾದಿಗೆ ಎಳೆಯಲು ಬಿಜೆಪಿಯವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಮುದ್ದೇಬಿಹಾಳದಲ್ಲಿ ಶುಕ್ರವಾರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಅಭಿವೃದ್ಧಿ ಕೆಲಸಕ್ಕೆ ಹಣ ಇಲ್ದದ್ದಿದ್ದರೆ, ಮುದ್ದೇಬಿಹಾಳ ಕ್ಷೇತ್ರದಲ್ಲಿ ₹227 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಹಣ ಎಲ್ಲಿಂದ ಬಂತು’ ಎಂದು ಪ್ರಶ್ನಿಸಿದರು.
‘ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ. ರಾಜ್ಯ ದಿವಾಳಿ ಆಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ, ಅಧಿಕಾರಕ್ಕೆ ಬಂದ ಏಳು ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಜೊತೆಗೆ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿ ಇಟ್ಟಿದ್ದೇವೆ’ ಎಂದು ಸಮರ್ಥಿಸಿಕೊಂಡರು.
ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ ಸಿ.ಎಸ್. ನಾಡಗೌಡ ಯಶವಂತ ರಾಯಗೌಡ ಪಾಟೀಲ, ಅಶೋಕ ಮನಗೂಳಿ, ವಿಠಲ ಕಟಕದೊಂಡ, ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ಇದ್ದರು.
Quote - ಬಿಜೆಪಿಯವರು ಕೇವಲ ಬಸವಣ್ಣನ ಹೆಸರು ವಚನ ಹೇಳುತ್ತಾರೆ ಹೊರತು ಕೃತಿಯಲ್ಲಿ ಪಾಲಿಸುತ್ತಿಲ್ಲ. ನಮ್ಮ ಸರ್ಕಾರ ಬಸವಣ್ಣಗೆ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ರಾಜಕೀಯ ಅಥವಾ ಆಷಾಢಭೂತಿಗಾಗಿ ಅಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ
Cut-off box - ‘ಆಪರೇಷನ್ ಬಿಟ್ಟರೆ ಬಿಜೆಪಿಯವರಿಗೆ ಬೇರೇನೂ ಗೊತ್ತಿಲ್ಲ’ ವಿಜಯಪುರ: ‘ರಾಜ್ಯದ ಜನರ ವಿಶ್ವಾಸ ನಂಬಿಕೆ ಗಳಿಸುವಲ್ಲಿ ವಿಫಲವಾದ ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಹಣಕೊಟ್ಟು ಶಾಸಕರನ್ನು ಕೊಂಡು ಬಹುಮತ ಮಾಡಿಕೊಳ್ಳುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಕಾಂಗ್ರೆಸ್ನಿಂದ ಬಿಜೆಪಿಗೆ ಬರಲು ಕೆಲ ನಾಯಕರು ದುಂಬಾಲು ಬಿದ್ದಿರುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ಮುಖಂಡ ಜಗದೀಶ ಶೆಟ್ಟರ್ ಹೇಳಿಕೆಗೆ ಅವರು ಮುದ್ದೇಬಿಹಾಳದಲ್ಲಿ ಹೀಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು. ‘ರಾಜ್ಯದ ಜನರು ಬಿಜೆಪಿಗೆ ಎಂದಿಗೂ ಪೂರ್ಣ ಅಧಿಕಾರ ಕೊಟ್ಟೇ ಇಲ್ಲ. 2008 2013 2018ರಲ್ಲಿ ಅವರು ಬಹುಮತದಿಂದ ಗೆದ್ದೇ ಇಲ್ಲ. ಕಾಂಗ್ರೆಸ್ ಪಕ್ಷ 2013ರಲ್ಲಿ ಗೆದ್ದಿದೆ. 2023ರಲ್ಲಿ 136 ಸ್ಥಾನಗಳನ್ನು ಪಡೆದು ಗೆದ್ದಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.