ಪ್ರಜಾವಾಣಿ ವಾರ್ತೆ
ಕೊಲ್ಹಾರ: ಪದವಿ ಪೂರ್ವ ಶಿಕ್ಷಣ ಇಲಾಖೆಯ ರಾಜ್ಯ ಮಟ್ಟದ ಕಬಡ್ಡಿ ಟೂರ್ನಿಯನ್ನು ನ. 19 ರಿಂದ 21ರವರೆಗೆ ಪಟ್ಟಣದ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಶಾಖಾಧಿಕಾರಿ ಪ್ರಕಾಶ ಗೊಂಗಡಿ ಹೇಳಿದರು.
ಪಟ್ಟಣದ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದ ವಿವಿಧ ಸಮಿತಿ ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕಾಲೇಜು ಮೈದಾನದಲ್ಲಿ ನಡೆಯಲಿರುವ ಟೂರ್ನಿಯ ಸಿದ್ಧತೆಗೆ ವಸತಿ, ಪ್ರಚಾರ, ಊಟದ ವ್ಯವಸ್ಥೆ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ವಿವಿಧ ಜಿಲ್ಲೆಗಳಿಂದ ಬರುವ ಕ್ರೀಡಾಪಟುಗಳನ್ನು ಪಟ್ಟಣಕ್ಕೆ ಕರೆತರಲು ತೆಲಗಿ ರೈಲು ನಿಲ್ದಾಣದಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ 64 ಕಾಲೇಜಿನವರು ಟೂರ್ನಿಗೆ ಸ್ವಾಗತ ಕೋರುವ ಫ್ಲೆಕ್ಸ್ ಗಳನ್ನು ಸಿದ್ಧಪಡಿಸಲಿದ್ದಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಆನಂದ ಡಿ. ಚವ್ಹಾಣ ಮಾತನಾಡಿ, ‘ನಮ್ಮ ಸಂಸ್ಥೆ ಸೇರಿದಂತೆ ವಿವಿಧ ಶಾಲೆ, ಕಾಲೇಜುಗಳ ಶಿಕ್ಷರನ್ನೊಳಗೊಂಡು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಉಪನಿರ್ದೇಶಕರು ರಚಿರುವ ಸಮಿತಿಗಳೊಂದಿಗೆ ಸಂಘಟಿತರಾಗಿ ಪಂದ್ಯಾಟದ ಯಶಸ್ವಿಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.
‘ಸಂಸ್ಥೆಯ ವಿಶಾಲವಾದ ಮೈದಾನದಲ್ಲಿ 4 ಪಂದ್ಯಗಳು ಏಕಕಾಲಕ್ಕೆ ನಡೆಯುವಂತೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂಕಣಗಳಿಗೆ ಮ್ಯಾಟ್ ವ್ಯವಸ್ಥೆ ಮಾಡಲಾಗುವುದು. ಪಂದ್ಯಗಳ ವೀಕ್ಷಣೆಗೆ ಅಂಕಣದ ಸುತ್ತ 15 ಸಾವಿರ ಜನರು ಕುಳಿತುಕೊಳ್ಳಲು ವೀಕ್ಷಣಾ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು. ವಿವಿಧ ಶಾಲೆ, ವಸತಿ ಶಾಲೆ, ವಸತಿ ನಿಲಯಗಳಲ್ಲಿ ಕ್ರೀಡಾಪಟುಗಳ ವಸತಿ ವ್ಯವಸ್ಥೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.
ಪ್ರಾಚಾರ್ಯರಾದ ಕೆ.ಜಿ. ಲಮಾಣಿ, ಕೆ.ಎ. ಉಪ್ಪಾರ, ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಜಿ. ಜಮಖಂಡಿ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಬಿ. ಗೋಗಿ, ಉಪನ್ಯಾಸಕರಾದ ಎಂ.ಬಿ. ರೆಬಿನಾಳ, ಎಸ್.ಆರ್. ಮುತ್ತಗಿ, ಮಲ್ಲಿಕಾರ್ಜುನ ಹೂಗಾರ ಮಾತನಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.